ವಿಜಯಪುರ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸರ್ಕಾರಿ ನೌಕರರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಲೇಂಡಿ ಮಾತನಾಡಿ, ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ರದ್ದುಗೊಳಿಸಿರುವ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ಹೆಚ್ಚಳ ಮಾಡಬೇಕು, ಗಳಿಕೆ ರಜೆ ಸೌಲಭ್ಯ ಮತ್ತೆ ನೀಡಬೇಕು ಎಂದು ಆಗ್ರಹಿಸಿದರು.
30 ವರ್ಷ ಸೇವೆ ಪೂರೈಸಿರುವ ಅಥವಾ 55 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಭಾರತೀಯ ಜೀವ ವಿಮಾ ನಿಗಮ ಸೇರಿ ಹಲವು ಸಾರ್ವಜನಿಕ ರಂಗದ ಉದ್ದಿಮೆಗಳ ಖಾಸಗೀಕರಣ ಮಾಡಬಾರದು. ಕೂಡಲೇ ಜಿ.ಎಸ್.ಟಿ. ಬಿಡುಗಡೆ ಮಾಡಬೇಕು. ಹಲವು ಕಾರ್ಮಿಕ ವಿರೋಧಿ ಮತ್ತು ರೈತ- ವಿರೋಧಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕು, ಕೊರೊನಾ ವಾರಿಯರ್ಸ್ಗಳಿಗೆ ವಿಶೇಷ ಭತ್ಯೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.