ವಿಜಯಪುರ: ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿಯು ಸಿಂದಗಿ ಪೊಲೀಸ್ ಠಾಣೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಸಿಂದಗಿ ಪೊಲೀಸ್ ಠಾಣೆ ಪಿಎಸ್ಐ ಎಸ್.ಎಚ್. ಹೊಸಮನಿ, ಪೊಲೀಸ್ ಸಿಬ್ಬಂದಿಗಳಾದ ಎಸ್.ಬಿ.ನಾದ, ಗುರುರಾಜ ಮಾಶ್ಯಾಳ, ಆನಂದ ಪಾಟೀಲ, ಪಿ.ಎಲ್.ಪಟ್ಟೇದ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅಮಾನತು ಮಾಡಿದ್ದಾರೆ.
ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಆರೋಪಿ ದೇವಿಂದ್ರ ಸಂಗೋಗಿ(37) ಎಂಬಾತನನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಯು ಭಾನುವಾರ ಬೆಳಿಗ್ಗೆ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು.
ಪೊಲೀಸರ ಕಿರುಕುಳದಿಂದ ಆರೋಪಿ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಿಕುಟುಂಬದವರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.