ಸಚಿವ ಸಂಪುಟದಲ್ಲಿ ಪ್ರತಿ ಜಿಲ್ಲೆಗೂ ಪ್ರಾತಿನಿಧ್ಯ ನೀಡಿ: ಯತ್ನಾಳ

ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಪ್ರತಿ ಜಿಲ್ಲೆಗೂ ಪ್ರಾತಿನಿಧ್ಯ ನೀಡಿ, ಉಳಿದಂತೆ ಪಕ್ಷದ ಹಿರಿಯರಿಗೆ, ಹಿಂಬಾಲಕರಿಗೆ ಅವಕಾಶ ಕೊಡಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿಯವರನ್ನು ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಜಯಪುರ, ಮೈಸೂರು, ಚಾಮರಾಜನಗರ, ಕೊಡಗು, ಯಾದಗಿರಿ, ಕಲಬುರಗಿ ಸೇರಿದಂತೆ ಅನೇಕ ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿಲ್ಲ. ಈ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡಬೇಕು. ಅಲ್ಲದೇ, ಎಲ್ಲ ಜಾತಿಯವರಿಗೂ ಸೂಕ್ತ ಪ್ರಾತಿನಿಧ್ಯ ಕೊಡಬೇಕು ಎಂದರು.
ಆದಷ್ಟು ಶೀಘ್ರ ಸಚಿವ ಸಂಪುಟ ವಿಸ್ತರಣೆಯಾಗಬೇಕು. ಯಾರನ್ನೇ ಸಚಿವರನ್ನಾಗಿ ಮಾಡಿದರೂ ಕನಿಷ್ಠ ಒಂದೂವರೇ ವರ್ಷ ಕಾಲಾವಕಾಶ ನೀಡಿದರೆ ಸಮರ್ಥವಾಗಿ ಕಾರ್ಯನಿರ್ವಹಿಸಲು, ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಅನುಕೂಲವಾಗುತ್ತದೆ. ಚುನಾವಣೆ ಕೇವಲ ಆರು ತಿಂಗಳು ಇದ್ದಾಗ ಸಚಿವ ಸಂಪುಟ ಬದಲಾವಣೆ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.
ಒಂದೊಂದೇ ಜಿಲ್ಲೆಯ ಮೂರ್ನಾಲ್ಕು ಶಾಸಕರನ್ನು ಸಚಿವರನ್ನಾಗಿ ಮಾಡಿದರೆ ಉಳಿದ ಜಿಲ್ಲೆಗಳಿಗೆ ಅನ್ಯಾಯವಾಗಲಿದೆ. ಉಳಿದ ಜಿಲ್ಲೆಯ ಜನರು ಬಿಜೆಪಿಗೆ ಮತ ಹಾಕಿಲ್ಲವೇ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತದೆ ಎಂದರು.
ನಿಗಮ, ಮಂಡಳಿ ಅಧ್ಯಕ್ಷರ ಬದಲಾವಣೆಯೂ ಆಗಬೇಕಿದೆ. ಕೆಜೆಪಿಯಿಂದ ಬಂದ ಬಹುತೇಕ ಮುಖಂಡರೇ ನಿಗಮ, ಮಂಡಳಿ ಅಧ್ಯಕ್ಷರಾಗಿದ್ದಾರೆ. ಬಿಜೆಪಿ ಕಟ್ಟಿ ಬೆಳೆಸಿದವರ ನಿರ್ಲಕ್ಷ್ಯ ಆಗಿದೆ. ಅಂಥವರಿಗೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೆಡ್ಡು ಹೊಡೆದು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದಾದರೇ ಪಕ್ಷದಲ್ಲೂ ಬದಲಾವಣೆಯಾಗಬೇಕಿದೆ. ಯುಗಾದಿ ವೇಳೆಗೆ ಹೊಸ ಚೈತನ್ಯದೊಂದಿಗೆ ಬಿಜೆಪಿ ಸಜ್ಜಾಗಬೇಕಿದೆ ಎಂದು ಹೇಳಿದರು.
ಜೆಡಿಎಸ್, ಕಾಂಗ್ರೆಸ್ನ ಅನೇಕ ಶಾಸಕರು ಮುಖ್ಯಮಂತ್ರಿ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಸಂಪರ್ಕದಲ್ಲಿ ಇದ್ದಾರೆ. ವಿಜಯಪುರದ ಬಿಜೆಪಿ ಶಾಸಕರೊಬ್ಬರು ಕಾಂಗ್ರೆಸ್ಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.