ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾ ವಲಸಿಗರನ್ನು ಕಟ್ಟುನಿಟ್ಟಾಗಿ ಕ್ವಾರಂಟೈನ್ ಮಾಡಿ: ಶಶಿಕಲಾ ಜೊಲ್ಲೆ

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ
Last Updated 3 ಜೂನ್ 2020, 12:17 IST
ಅಕ್ಷರ ಗಾತ್ರ

ವಿಜಯಪುರ: ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದಿರುವವರನ್ನು ಕಟ್ಟುನಿಟ್ಟಾಗಿ ಸಾಂಸ್ಥಿಕ ಹಾಗೂ ಹೋಂ ಕ್ವಾರಂಟೈನ್ ಒಳಪ‍ಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಅವರು, ಜಿಲ್ಲೆಯ ಗಡಿಭಾಗದಲ್ಲಿ ಚೆಕ್‍ಪೋಸ್ಟ್‌ಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು ಎಂದು ಹೇಳಿದರು.

ಕ್ವಾರಂಟೈನ್ ಕೇಂದ್ರಗಳ ಹಾಗೂ ಕಂಟೈನ್ಮೆಂಟ್ ವಲಯಗಳ ಸೂಕ್ತ ನಿರ್ವಹಣೆಯಾಗಬೇಕು. ಕೋವಿಡ್-19 ಸಂಬಂಧಿಸಿದಂತೆ ಯಾವುದೇ ಲೋಪದೋಷಗಳಾಗದಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಹೊರರಾಜ್ಯದಿಂದ ಜಿಲ್ಲೆಗೆ ಬಂದಿರುವ ಕಾರ್ಮಿಕರಿಗೆ ಎನ್.ಆರ್.ಇ.ಜಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮುಂಗಾರು ಸಂದರ್ಭದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳ ಮೂಲಕ ಡಿಎಪಿ, ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ವಿತರಣೆಯಾಗಬೇಕು ಎಂದು ಹೇಳಿದರು.

ಮದುವೆಗಳಿಗಾಗಿ ಮಂಗಲಕಾರ್ಯಾಲಯಗಳನ್ನು ಕಾಯ್ದಿರಿಸಿ, ಲಾಕ್‍ಡೌನ್‍ದಿಂದ ಸಮಸ್ಯೆ ಎದುರಿಸುತ್ತಿರುವ ಮತ್ತು ಠೇವಣಿ ಹಣ ನೀಡಿರುವವರಿಗೆ ಮರಳಿ ಹಣ ದೊರಕಿಸಿ ಕೊಡುವುದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 22 ಕಂಟೈನ್ಮೆಂಟ್ ವಲಯಗಳನ್ನು ನಿರ್ಮಿಸಲಾಗಿದ್ದು, 5 ಕಂಟೈನ್ಮೆಂಟ್ ವಲಯಗಳು ರದ್ಧಾಗಿವೆ. ಸದ್ಯಕ್ಕೆ 17 ಕಂಟೈನ್ಮೆಂಟ್ ವಲಯಗಳು ಚಾಲ್ತಿಯಲ್ಲಿವೆ, ಇವುಗಳ ಮೇಲೆ ಪೂರ್ತಿ ನಿಗಾ ಇಡಲಾಗಿದೆ ಎಂದರು.

ಹೊರ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೆ ಆಗಮಿಸಿದ್ದ 26,324 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 23,834 ಜನರು ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದು, ಹೋಂ ಕ್ವಾರಂಟೈನ್ ಮಾಡಿ ನಿಗಾ ಇಡಲಾಗಿದೆ ಎಂದರು.

ಜಿಲ್ಲೆಯಲ್ಲಿ 576 ಸಾಂಸ್ಥಿಕ ಕ್ವಾರಂಟೈನ್‌ಗಳ ಪೈಕಿ ಸದ್ಯ 133 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿದ್ದು, ಈ ಕ್ವಾರಂಟೈನ್ ಕೇಂದ್ರಗಳಲ್ಲಿ 2503 ಜನರನ್ನು ನಿಗಾ ಇಡಲಾಗಿದೆ ಎಂದು ಹೇಳಿದರು.

ಜಿಲ್ಲೆಗೆ ಮಹಾರಾಷ್ಟ್ರದಿಂದ ಈವರೆಗೆ 21,113,ಗೋವಾದಿಂದ 2982, ಅನ್ಯ ರಾಜ್ಯಗಳಿಂದ 6676 ಜನ ವಲಸಿಗರು ಆಗಮಿಸಿದ್ದು, 21,015 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇವುಗಳಲ್ಲಿ 16,514 ಜನರ ವರದಿ ನೆಗೆಟಿವ್ ಬಂದಿದೆ. 69 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ 4432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದರು.

ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಸಾಸನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಹೇಂದ್ರ ಕಾಪಸೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್‌ ಮೋಹನ್‍ಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT