ವಿಜಯಪುರ: ಹೊರ್ತಿ ಮಾರ್ಗವಾಗಿ ಇಂಡಿಯಿಂದ ಹಳ್ಳಗುಣಕಿಯವರೆಗಿನ ರಸ್ತೆ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಸಂಸದ ರಮೇಶ ಜಿಗಜಿಣಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯ್ತಿ ಸಭಾ ಭವನದಲ್ಲಿ ನಡೆದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 2,70,396 ಕುಟುಂಬಗಳು ನೋಂದಣಿ ಮಾಡಿಕೊಂಡಿವೆ ಎಂದರು.
2,70,280 ಕುಟುಂಬಗಳಿಗೆ ಉದ್ಯೋಗ ಚೀಟಿಗಳನ್ನು ನೀಡಲಾಗಿದೆ. 1046 ಕುಟುಂಬಗಳು 100 ದಿನ ಉದ್ಯೋಗ ಪೂರ್ಣಗೊಳಿಸಿವೆ. 1,08,359 ಕುಟುಂಬಗಳಿಗೆ ಉದ್ಯೋಗ ಬೇಡಿ ಅರ್ಜಿ ಸಲ್ಲಿಸಿದ್ದು, 92,851 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ ಎಂದು ಹೇಳಿದರು.
ಒಟ್ಟು 44,519 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ 16138 ಕಾಮಗಾರಿಗಳು ಪೂರ್ಣಗೊಂಡಿದ್ದು, 28381 ಕಾಮಗಾರಿಗಳು ಪ್ರಗತಿಯಲ್ಲಿವೆ. ಒಟ್ಟು 38,29,549 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನಾ ನಿರ್ದೇಶಕ ಮಾತನಾಡಿ, ಒಟ್ಟು 212 ಗ್ರಾಮ ಪಂಚಾಯ್ತಿಗಳಲ್ಲಿ 159 ಗ್ರಾಮ ಪಂಚಾಯತ್ ಒಕ್ಕೂಟಗಳ ರಚನೆ ಮಾಡಲಾಗಿದೆ. 83 ಒಕ್ಕೂಟಗಳಿಗೆ ₹ 8.03 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.
ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ನಿರ್ದೇಶಕ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಯಾವುದೇ ತರಬೇತಿ ನೀಡಿಲ್ಲ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಕಾರ್ಯನಿರ್ವಾಹಕ ಎಂಜಿನಿಯರ್ ಮಾತನಾಡಿ, ಯೋಜನೆ 111.52 ಕಿ. ಮೀ. ರಸ್ತೆ ಮಂಜೂರಾಗಿದೆ ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 19,957 ಮನೆಗಳು ಮಂಜೂರಾಗಿದ್ದು, 17,072 ಫಲಾನುಭವಿಗಳನ್ನು ಅನುಮೋದನೆಯಾಗಿವೆ. ಇದರಲ್ಲಿ 3542 ಪ್ರಾರಂಭವಾಗಿದ್ದು, 1533 ಪಾಯಾ ಹಂತದಲ್ಲಿ, 2737 ಲಿಂಟನ್ ಹಂತದಲ್ಲಿ, 2714 ರೂಪ್ ಹಂತದಲ್ಲಿ ಹಾಗೂ 5628 ಪೂರ್ಣಗೊಂಡಿವೆ ಎಂದು ಸಭೆಗೆ ತಿಳಿಸಿದರು.
ಪ್ರಧಾನಮಂತ್ರಿ ಜಲಜೀವನ ಯೋಜನೆಯಡಿ ಪ್ರತಿ ಗ್ರಾಮದ ಮನೆ ಮನೆಗೂ ಕುಡಿಯುವ ನೀರು ತಲುಪಿಸುವ ಕಾರ್ಯವನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಗುರಿ ಇಟ್ಟುಕೊಂಡಿದೆ. ಪ್ರಸಕ್ತ ವರ್ಷದಲ್ಲಿ 298 ಗ್ರಾಮಗಳಲ್ಲಿ 1,15,000 ಮನೆಗಳಿಗೆ ತಲುಪಿಬೇಕೆಂಬ ನಿಟ್ಟಿನಲ್ಲಿ 88 ಕಡೆಗಳಲ್ಲಿ ವರ್ಕ್ ಆರ್ಡರ್ ನೀಡಲಾಗಿದೆ ಹಾಗೂ 15 ಕಡೆಗಳಲ್ಲಿ ಕೆಲಸಗಳು ಪ್ರಾರಂಭವಾಗಿದೆ. ಉಳಿದ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದರು.
ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ) ಕುರಿತು ಮಾಹಿತಿ ನೀಡಿದ ಉಪ ಕಾರ್ಯದರ್ಶಿ, 2020-21ನೇ ಸಾಲಿಗೆ ಒಟ್ಟು 10,419 ವೈಯಕ್ತಿಕ ಶೌಚಾಲಯ ನಿರ್ಮಾಣದ ಗುರಿ ಇದ್ದು, ಇದರಲ್ಲಿ 10,415 ನಿರ್ಮಿಸಲಾಗಿದೆ. 9 ಶೌಚಾಲಯಗಳು ಪ್ರಗತಿಯಲ್ಲಿದ್ದು, ಇನ್ನೂ 4 ಶೌಚಾಲಯಗಳು ಬಾಕಿ ಉಳಿದಿವೆ ಎಂದರು.
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಾತನಾಡಿ, ಯೋಜನೆಯಡಿ ವಿಜಯಪುರ 96 ಇಂಡಿ 40, ಬಸವನ ಬಾಗೆವಾಡಿ 85, ಮುದ್ದೇಬಿಹಾಳ 68 ಮತ್ತು ಸಿಂದಗಿ 39 ಸೇರಿದಂತೆ ಒಟ್ಟು 328 ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳು ಮಂಜೂರಾಗಿವೆ. ಇವುಗಳಲ್ಲಿ 235 ಪೂರ್ಣಗೊಂಡಿದ್ದು, 93 ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮುಖ್ಯ ಯೋಜನಾಧಿಕಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.