ವಿಜಯಪುರ: ಅಧಿಕಾರಿ ಮತ್ತು ಸಿಬ್ಬಂದಿಗೆ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಹಾಗೂ ಒತ್ತಡದ ಜೀವನದಿಂದ ಹೊರಬರಲು ಕ್ರೀಡೆ ಸಹಕಾರಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಗರದ ಜಿಲ್ಲಾ ಪಂಚಾಯಿತಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ 2022-23ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿಅವರು ಮಾತನಾಡಿದರು.
ದೈನಂದಿನ ಜೀವನದಲ್ಲಿ ಆರೋಗ್ಯಯುತ ಶಿಸ್ತನ್ನು ರೂಢಿಸಿಕೊಳ್ಳಬೇಕು. ನಿಯಮಿತವಾಗಿ ಯೋಗ, ವ್ಯಾಯಾಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸದೃಢ ಮನಸ್ಸನ್ನು ಹೊಂದಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಮೂಲಕ ಎರಡು ವರ್ಷಗಳಿಂದಲೂ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ ಎಂದರು.
ಇಲಾಖೆಯ ಕಾರ್ಯಚಟುವಟಿಕೆಗಳು ಒತ್ತಡದಿಂದ ಕೂಡಿದರೂ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ತಾಳ್ಮೆ ಹಾಗೂ ಸಮಾಧಾನಚಿತ್ತದಿಂದ ಕಾರ್ಯ ನಿರ್ವಹಿಸಲು ಕ್ರೀಡೆ ಬಹುಮುಖ್ಯ ಎಂದರು.
ಜಿಲ್ಲಾ ಪಂಚಾಯಿತಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧಿಕಾರಿ ಹಾಗೂ ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಸಿಬ್ಬಂದಿಗೆ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗುವುದು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಮಾತನಾಡಿ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.
ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ ಉಪಸ್ಥಿತರಿದ್ದರು.