ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಅಂದು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಿ, ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸುವ ದಿನ ರಾಜ್ಯ ನಾಯಕರು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು.
ವಿಜಯಪುರ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದು, ಅಂದಿನ ಕಾರ್ಯಕ್ರಮಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ವಿನಂತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶಕ್ಕೆ ಸುಭದ್ರ ಆಡಳಿತ ನೀಡಿದ್ದು, ಮತ್ತೊಮ್ಮೆ ಅವರು ಈ ದೇಶದ ಪ್ರಧಾನಿಯಾಗುವುದು ನಿಶ್ಚಿತ. ಅವರ ಕೈ ಬಲಪಡಿಸಲು ವಿಜಯಪುರ ಜನರು ಆಶೀರ್ವಾದ ಮಾಡಬೇಕು ಎಂದು ಅವರು ಹೇಳಿದರು.
ಟಿಕೆಟ್ ಘೋಷಣೆಯಾದ ಬಳಿಕ ಈಗಾಗಲೇ ಜಿಲ್ಲೆಯಾದ್ಯಂತ ಒಂದು ಸುತ್ತು ಪ್ರವಾಸ ಮಾಡಿ, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಸಂಘಟಿತ ಹೋರಾಟ ನಡೆಸುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯಾದ್ಯಂತ ಎಲ್ಲ ಸಮಾಜದವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
‘ದೇಶಕ್ಕೆ ಮೋದಿ; ವಿಜಯಪುರಕ್ಕೆ ಜಿಗಜಿಣಗಿ’ ಎಂಬ ಘೋಷಣೆಗಳು ಎಲ್ಲೆಲ್ಲೂ ಕೇಳಿಬರುತ್ತಿದೆ. ನನ್ನ ಆಯ್ಕೆ ನಿಶ್ಚಿತ ಎಂದು ಅವರು ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.