ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆ ಅಪಘಾತ ತಡೆಗೆ ಕ್ರಮವಹಿಸಿ

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಸೂಚನೆ
Published 15 ಫೆಬ್ರುವರಿ 2024, 14:08 IST
Last Updated 15 ಫೆಬ್ರುವರಿ 2024, 14:08 IST
ಅಕ್ಷರ ಗಾತ್ರ

ವಿಜಯಪುರ: ‘ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ಅಧಿಕಾರಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಸಾರ್ವಜನಿಕರು ಪಾಲಿಸುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು’ ಎಂದು  ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಬೇಕು. ರಸ್ತೆಗಳ ಸುಧಾರಣೆ, ವೈಜ್ಞಾನಿಕವಾಗಿ ರಸ್ತೆಗಳ ನಿರ್ಮಾಣ ಹಾಗೂ ಅಪಘಾತ ತಡೆಗೆ ಸಂಬಂಧಿಸಿದ ಇಲಾಖೆಗಳು ಪೂರ್ವ ಸಿದ್ಧತಾ ಕ್ರಮ ಕೈಗೊಂಡು ಅಪಘಾತ ತಡೆಗೆ ಕ್ರಮವಹಿಸಬೇಕು’ ಎಂದರು.

‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ಸೇವೆ ಒದಗಿಸಬೇಕು. ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ನಿಮಯಗಳ ಬಗ್ಗೆ ತಿಳಿಸಬೇಕು. ಸಾರಿಗೆ ನಿಮಯಗಳ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಇಲಾಖೆಗಳು ನಿಗಾ ವಹಿಸಬೇಕು’ ಎಂದರು.

‘ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣ ಸಂಪರ್ಕಿಸುವ ಕಡೆ ಅಗತ್ಯ ಮಾಹಿತಿ ಫಲಕ ಹಾಗೂ ಕಾಮಗಾರಿ ನಡೆಯುವ ಸ್ಥಳದಲ್ಲಿ ಅಪಾಯದ ಸೂಚನೆಯ ಮಾಹಿತಿ ಫಲಕ ಅಳವಡಿಸಬೇಕು. ಸಾರಿಗೆ, ಪೊಲೀಸ್, ಲೋಕೋಪಯೋಗಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸಮಿಕ್ಷೆ ನಡೆಸಿ, ಅಪಘಾತ ತಡೆಗಟ್ಟುವ ವಿಧಾನಗಳನ್ನು ಅನುಸರಿಸಿ, ವೇಗದ ಮಿತಿ, ರಸ್ತೆ ತಿರುವು, ಅಡ್ಡರಸ್ತೆ ಹಾಗೂ ಮುನ್ನೆಚರಿಕೆಗಳ ಬಗ್ಗೆ ನಾಮಫಲಕಗಳನ್ನು ಕಾಣುವಂತೆ ಕಡ್ಡಾಯವಾಗಿ ಅಳವಡಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ತನಹಳ್ಳಿ, ಲೊಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತುರ್ತು ಸೇವೆಗಳಿಗೆ ಆಂಬುಲೆನ್ಸ್‌

‘ಅಫಘಾತ ಅಥವಾ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಹತ್ತಿರದ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಲು ಬಳಸಬೇಕಾದ ಸಹಾಯವಾಣಿ ಸಂಖ್ಯೆಗಳನ್ನು ಹೆದ್ದಾರಿ ಮಾಹಿತಿ ಫಲಕಗಳಲ್ಲಿ ನಮೂದಿಸಬೇಕು. ತುರ್ತು ಸೇವೆಗಳಿಗೆ ಆಂಬುಲೆನ್ಸ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ವೇಗವಾಗಿ ವಾಹನ ಚಲಾಯಿಸುವುವವರ ಮೇಲೆ ನಿಗಾ ವಹಿಸಬೇಕು. ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗೃತಾ ಕ್ರಮ ಕೈಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT