ವಿಜಯಪುರ: ಪೊನ್ನಮ್ಮಾಳ್ ಸುನೀಲ್ ಕುಮಾರ್ ಅವನ್ನು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಮಂಗಳವಾರ ನಿಯೋಜಿಸಿದೆ.
ಹಾಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ (ಹಣಕಾಸು–ಐಟಿ)ರಾಗಿದ್ದ ಪಿ.ಸುನೀಲ್ ಕುಮಾರ್ ಈ ಮೊದಲು ಕೊಪ್ಪಳ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. 2011ರ ಸಾಲಿನ ಐಎಎಸ್ ಅಧಿಕಾರಿಯಾಗಿದ್ದಾರೆ.
ವಿರೋಧ: ಹಾಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರ ವರ್ಗಾವಣೆಗೆ ಜಿಲ್ಲೆಯ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ವಿರೋಧ ವ್ಯಕ್ತವಾಗಿದೆ. ಕಳೆದ ಒಂದೂವರೆ ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವರು, ಕೋವಿಡ್ ಸಂದರ್ಭದಲ್ಲಿ ದಕ್ಷತೆ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದರು.
ವೈ.ಎಸ್.ಪಾಟೀಲ ಅವರನ್ನು ಮೈಸೂರಿನ ಆಡಳಿತಾತ್ಮಕ ತರಬೇತಿ ಸಂಸ್ಥೆಗೆ ಜಂಟಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.