ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿ ವ್ಯಾಪಿಸತೊಡಗಿದೆ. ಶುಕ್ರವಾರ ಒಂದೇ ದಿನ 206 ಜನರಿಗೆ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಕಾಣಿಸಿಕೊಂಡ ಕಳೆದ ಒಂದು ವರ್ಷದ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಕಳೆದ ಒಂದು ತಿಂಗಳ ಅವಧಿಯಲ್ಲಿ ಏಳು ಜನ ಸಾವಿಗೀಡಾಗಿದ್ದಾರೆ. ಮೂರು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
10 ದಿನಗಳ ಈಚೆಗೆ ಪ್ರತಿದಿನ ಸರಾಸರಿ 100ಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಇಷ್ಟಾದರೂ ಸಹ ಮಾರುಕಟ್ಟೆ, ಸಾರ್ವಜನಿಕ ಸಭೆ, ಸಮಾರಂಭ, ಮದುವೆ ಮತ್ತಿತರ ಕಡೆ ಜನರು ಸ್ವಲ್ಪವೂ ಕೋವಿಡ್ ಅಂಜಿಕೆ ಇಲ್ಲದೇ ಮೈಮರೆತು ಸೇರುತ್ತಿದ್ದಾರೆ.
ಕೋವಿಡ್ ಮಾರ್ಗಸೂಚಿ ಅನುಷ್ಠಾನಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯೂ ಹೆಚ್ಚು ಆದ್ಯತೆ ನೀಡಬೇಕಾದ ಅಗತ್ಯವಿದೆ. ಇಲ್ಲವಾದರೆ ಕೋವಿಡ್ ಮತ್ತಷ್ಟು ತೀವ್ರಗತಿಯಲ್ಲಿ ವ್ಯಾಪಿಸುವ, ಸಾವು–ನೋವು ಹೆಚ್ಚಳವಾಗುವ ಸಾಧ್ಯತೆ ಇದೆ.
ಸಿಂದಗಿಯಲ್ಲಿ ಸಭೆ:
ಸಿಂದಗಿಹಾಗೂ ದೇವರಹಿಪ್ಪರಗಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಶುಕ್ರವಾರ ಸಭೆ ನಡೆಸಿದರು.
ಮಾಸ್ಕ್ ಧರಿಸದ,ಪರಸ್ಪರ ಅಂತರ ಕಾಪಾಡಿಕೊಳ್ಳದವರಿಗೆ ದಂಡ ವಿಧಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಗುರಿ ನಿಗದಿಪಡಿಸಿದಂತೆ ಸ್ವ್ಯಾಬ್ ಸಂಗ್ರಹಿಸಬೇಕು. ಕ್ವಾರಂಟೈನ್ ವಾಚ್ ಆ್ಯಪ್ನಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ಸೋಂಕಿತ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಗುರುತಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ದೇವರಹಿಪ್ಪರಗಿ ಹಾಗೂ ಸಿಂದಗಿ ತಾಲ್ಲೂಕಿನ ವಿವಿಧ ಇಲಾಖೆಯ ಹಾಗೂ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.