ವಿಜಯಪುರ: ಜಿಲ್ಲೆಯ ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಬೆವನೂರ ಗ್ರಾಮದ ಬಳಿ ಜೂನ್ 17 ನಡೆದ ದರೋಡೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್ ದೃಡವಾಗಿದೆ.
ಆರೋಪಿಗಳಿಗೆ ಕೋವಿಡ್ ದೃಡವಾದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಕೋವಿಡ್ 19 ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಪಿಎಸ್ಐ ಮತ್ತು 37 ಸಿಬ್ಬಂದಿಯ ಗಂಟಲುದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಆರೋಪಿಗಳ ಜೊತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 14 ಜನ ಸಿಬ್ಬಂದಿ ಮತ್ತು ಇಬ್ಬರು ಪಿಎಸ್ಐ ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ಬಂಗಾರವನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಮಹಾರಾಷ್ಟ್ರ ಮೂಲದ ದಂಪತಿಯಿಂದ ₹ 9.89 ಲಕ್ಷ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಆಲಮೇಲ ಠಾಣೆ ಪೊಲೀಸರು ಬಂಧಿಸುವ ಮೂಲಕ ಪ್ರಶಂಶೆಗೆ ಪಾತ್ರರಾಗಿದ್ದರು.