ವಿಜಯಪುರ: ಭೀಮಾ ನದಿ ತೀರದಲ್ಲಿ ಅಕ್ರಮ ಮರಳು ಮಾಫಿಯಾ, ಡ್ರಗ್ಸ್ ದಂಧೆ, ಕಾನೂನು ಬಾಹಿರ ಕೃತ್ಯದ ವಿರುದ್ಧ ಧ್ವನಿ ಎತ್ತಿದ ಪರಿಣಾಮ ನನಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ನಾಗಠಾಣ ಶಾಸಕ ದೇವಾನಂದ ಚವ್ಹಾಣ ಆರೋಪಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಗುರುವಾರ ತೆರಳಿ ತಮಗೆ ಜೀವ ಬೆದರಿಕೆ ಇದ್ದು, ಸೂಕ್ತ ರಕ್ಷಣೆ ನೀಡುವಂತೆ ಕೋರಿದ ಬಳಿಕ ಅವರು ಮಾತನಾಡಿದರು.
ಭೀಮಾ ನದಿ ತೀರದ ಪರಿಸರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸ್ ಸಹಕಾರದಲ್ಲೇ ಈ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಸರ್ಕಾರ ಇಬ್ಬರು ಗನ್ ಮ್ಯಾನ್ಗಳನ್ನು ನೀಡಿದ್ದರೂ ರಾತ್ರಿ ವೇಳೆ ಒಬ್ಬರೇ ಓಡಾಡುವಾಗ ಅಪಾಯ ಮಾಡುವ ಸಾಧ್ಯತೆ ಇದೆ. ಹೀಗಾಗಿ ನನ್ನ ಹಾಗೂ ನನ್ನ ಕುಟುಂಬ ಸದಸ್ಯರ ರಕ್ಷಣೆಗೆ ಹೆಚ್ಚಿನ ಪೊಲೀಸ್ ಭದ್ರತೆಯ ಅಗತ್ಯವಿದೆ. ಒಂದೊಮ್ಮೆ ಭದ್ರತೆ ಸಿಗದೇ ನನ್ನ ಕುಟುಂಬಕ್ಕೆ ಅಪಾಯವಾದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.