ವಿಜಯಪುರ: ಕೃಷ್ಣಾ ನದಿ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ(ಐಸಿಸಿ)ಯನ್ನು ಶೀಘ್ರ ರಚಿಸಬೇಕು ಹಾಗೂ ಸಮಿತಿ ಸಭೆಯನ್ನು ಕರೆಯಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಆಗ್ರಹಿಸಿದ್ದಾರೆ.
ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರು ಈ ಸಂಬಂಧ ಪತ್ರ ಬರೆದು, ಈವರೆಗೂ ಐಸಿಸಿ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡಿಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾಡಿಕೆಯಂತೆ ಪ್ರತಿ ವರ್ಷ ಜುಲೈ 15ಕ್ಕೆ ಕಾಲುವೆಗಳಿಗೆ ನೀರು ಹರಿಸುವುದು ಸಂಪ್ರದಾಯವಾಗಿರುತ್ತದೆ. ಆದರೆ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಕಾಲುವೆಗಳಿಗೆ ನೀರು ಹರಿಸಿರುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಭಾಗದಲ್ಲಿ ಯಥೇಚ್ಛವಾಗಿ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಕಾರಣ ತುರ್ತಾಗಿ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆದು ಕಾಲುವೆಗಳಿಗೆ ನೀರು ಹರಿಸುವ ಬಗ್ಗೆ ಈ ಭಾಗದ ಶಾಸಕರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ