ವಿಜಾಪುರ: ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯ ಗ್ರಾಮೀಣ ಅಂಚೆ ನೌಕರರು ಮಂಗಳವಾರದಿಂದ ಮುಷ್ಕರ ಆರಂಭಿಸಿದ್ದಾರೆ. ಇಲ್ಲಿಯ ಪ್ರಧಾನ ಅಂಚೆ ಕಚೇರಿ ಎದುರು ಧರಣಿ ನಡೆಸುತ್ತಿರುವ ಅವರು, ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಕರೆಯ ಮೇರೆಗೆ ಈ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸುಪ್ರೀಂ ಕೋರ್ಟ್ನ ಆದೇಶ ಹಾಗೂ ನ್ಯಾ.ತಲವಾರ್ ಸಮಿತಿ ವರದಿ ಅನುಸಾರ ಗ್ರಾಮೀಣ ಅಂಚೆ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು. ಇಲಾಖೆಯ ನೌಕರರಿಗೆ ಕೊಡುವ ಬೋನಸ್ನ್ನು ತಮಗೂ ನೀಡಬೇಕು. ಅನುಕಂಪ ಆಧಾರದ ಮೇಲೆ ತೆಗೆದುಕೊಳ್ಳುವ ನೌಕರರಿಗೆ ಈಗಿರುವ ಪದ್ಧತಿಯನ್ನು ಕೈಬಿಟ್ಟು ಹಿಂದಿನಂತೆ ಎಲ್ಲ ವಾರಸುದಾರರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಇಲಾಖೆಯಲ್ಲಿಯ ಜಿ.ಡಿ.ಎಸ್. ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಜಾರಿಗೆ ಸಂಪುಟ ಮಂಜೂರಾತಿ ನೀಡಬೇಕು. ಅಂಚೆ ಇಲಾಖೆಯಲ್ಲಿ ದಿನಗೂಲಿ ನೌಕರರಿಗೆ 2006ರಿಂದ ಪೂರ್ವಾನ್ವಯ ವಾಗುವಂತೆ ವೇತನ ಪರಿಷ್ಕರಿಸಿ ಎಲ್ಲ ಸೌಲಭ್ಯ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಸಂಘದ ವಿಜಾಪುರ ವಿಭಾಗದ ಅಧ್ಯಕ್ಷ ಎಸ್.ವೈ. ಥೋರಾತ್, ಪ್ರಧಾನ ಕಾರ್ಯದರ್ಶಿ ಬಿ.ಎಲ್ ಹೂಗಾರ ಖಜಾಂಚಿ ಐ.ಸಿ. ಹಂಚನಾಳ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.