ಶಹಾಪುರ: ನಮ್ಮ ಸಂವಿಧಾನ ಎಲ್ಲಾ ಕಾನೂನುಗಳ ತಾಯಿಯಂತೆ ಇದೆ. ನಮ್ಮ ಸಂರಕ್ಷಣೆಗೆ ಸಂವಿಧಾನ ಇರುವಾಗ ಅದನ್ನು ನಾವೆಲ್ಲರೂ ಅಧ್ಯಯನ ಮಾಡಬೇಕು ಎಂದು ಹಿರಿಯ ವಕೀಲರಾದ ಭಾಸ್ಕರರಾವ ಮುಡಬೂಳ ತಿಳಿಸಿದರು.
ನ್ಯಾಯಾಲಯದ ಆವರಣದಲ್ಲಿ ಗುರುವಾರ ತಾಲ್ಲೂಕು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನ ರಕ್ಷಣೆಯಲ್ಲಿ ವಕೀಲರ ಪಾತ್ರ ಮುಖ್ಯವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೆ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿಸಬೇಕು. ದುರಂತವೆಂದರೆ ಹಕ್ಕುಗಳ ಬಗ್ಗೆ ಪ್ರತಿಪಾದನೆ ಮಾಡುತ್ತಿದ್ದೇವೆ,. ಕರ್ತವ್ಯದಿಂದ ವಿಮುಖರಾಗುತ್ತಿರುವುದು ಸರಿಯಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದರು.
ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಕಾಡಪ್ಪ ಹುಕ್ಕೇರಿ ಮಾತನಾಡಿ, 1950ರಲ್ಲಿ ನಮ್ಮ ಸಂವಿಧಾನ ಜಾರಿಗೆ ಬಂದಿತು. ಅದರಂತೆ 2015ರಿಂದ ದೇಶದ ತುಂಬೆಲ್ಲ ಸಂವಿಧಾನದ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.19ರಿಂದ 25ವರೆಗೆ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನದ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಎಂದರು.
ತಾಲ್ಲೂಕು ಕಾನೂನು ಸೇವೆಗಳ ಅಧ್ಯಕ್ಷರು ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಭಾಮಿನಿ, ಹಿರಿಯ ವಕೀಲರಾದ ಶ್ರೀನಿವಾಸರಾವ್ ಕುಲಕರ್ಣಿ, ಎಪಿಪಿಗಳಾದ ವಿನಾಯಕ ಕೋಡ್ಲಾ, ದಿವ್ಯಾರಾಣಿ, ವಕೀಲರ ಸಂಘದ ಅಧ್ಯಕ್ಷ ಎಂ.ಎಸ್.ರಾಂಪುರೆ, ಕಾರ್ಯರ್ಶಿ ಸಂದೀಪ ದೇಸಾಯಿ, ಸಯ್ಯದ ಇಬ್ರಾಹಿಂ ಜಮದಾರ, ಯೂಸೂಫ್ ಸಿದ್ದಕಿ, ಮಲ್ಕಣ್ಣ ಪಾಟೀಲ್, ರಮೇಶ ಸೇಡಂಕರ್, ಮಲ್ಲಿಕಾರ್ಜುನ ಬುಕ್ಕಲ್, ಬಿ.ಎಂ.ರಾಂಪುರೆ, ಆಯಿಷಾ ಪರ್ವಿನ್ ಜಮಖಂಡಿ, ಬಲ್ಕಿಷ್ ಫಾತಿಮಾ, ನಿಂಗಣ್ಣ ದೋರನಹಳ್ಳಿ, ನಾಗೇಂದ್ರ ಬಳಬಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.