ಕಲ್ಲದೇವನಹಳ್ಳಿ (ಹುಣಸಗಿ): ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಿಳಿಸಿಕೊಟ್ಟ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರಗಳನ್ನು ಜೀವನದಲ್ಲಿ ಪಾಲಿಸಿದರೇ ನೆಮ್ಮದಿಯ ಬದುಕು ನಡೆಸಬಹುದು ಎಂದು ಶಾಸಕ ರಾಜುಗೌಡ ಹೇಳಿದರು.
ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿ, ಭಾರತಕ್ಕೆ ಶ್ರೇಷ್ಠವಾದ ಸಂವಿಧಾನ ರಚಿಸಿದ್ದಾರೆ. ನಾವು ಅದರ ಸಾರವನ್ನು ಅರಿತುಕೊಳ್ಳಬೇಕು. ಅವರ ಕನಸು ನನಸು ಮಾಡಲು ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು.
ಡಾ. ಅಂಬೇಡ್ಕರ್ ಬರೆದ ಸಂವಿ ಧಾನ ವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಅದನ್ನು ಬದಲಾವಣೆ ಮಾಡುತ್ತೇವೆ ಎನ್ನುವುದು ಮೂರ್ಖತನ ಎಂದರು.
ವಿಶೇಷ ಉಪನ್ಯಾಸ ನೀಡಿ ಮಾತ ನಾಡಿದಕರಿಗೋಡೇಶ್ವರ, ಅಂಬೇಡ್ಕರ್ ಅವರ ಅನುಯಾಯಿ ಆದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಅನುಯಾಯಿ ಆಗ ಬಯಸುವವರು ಅವರ ತತ್ವಗಳನ್ನು ತಿಳಿದುಕೊಳ್ಳಬೇಕು. ಅವರೊಬ್ಬ ವಿಶ್ವ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಭಾರತೀಯರಿಗೆ ಸಂವಿಧಾನವೇ ಶ್ರೇಷ್ಠ ಗ್ರಂಥ ಎಂದರು.
ಜಿ.ಪಂ ಮಾಜಿ ಅಧ್ಯಕ್ಷ ರಾಜ ಶೇಖರಗೌಡ ಪಾಟೀಲ, ಮಾಜಿ ಸದಸ್ಯ ಎಚ್.ಪಾಟೀಲ, ರಾಮಣ್ಣ ಕಲ್ಲದೇವನ ಹಳ್ಳಿ ಮಾತನಾಡಿದರು. ನಾಗಣ್ಣ ಕಲ್ಲದೇವನಹಳ್ಳಿ ಅಧ್ಯಕ್ಷತೆ ವಹಿಸಿದ್ದರು.