ಯಾದಗಿರಿ: ಮಹಿಳೆ ನಗ್ನಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ನೀಲಾ ಕೆ ಮಾತನಾಡಿ, ಮಹಿಳೆ ನಗ್ನ ಮಾಡಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಂಘಟನೆಯಿಂದ ಪ್ರತಿಭಟನೆ ಮಾಡಲಾಗುತ್ತಿದ್ದರೂ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಭೇಟಿ ಮಾಡಲು ಬಿಡದೇ ಪೊಲೀಸರು ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹಿಳೆಯನ್ನು ಥಳಿಸಿ ಅಮಾನ ವೀಯವಾಗಿ ನಡೆದು ಕೊಳ್ಳಲಾಗಿದೆ. ಇಂಥ ಘಟನೆಯನ್ನು ಖಂಡಿಸಿ ನಾವು ಪ್ರತಿಭಟನೆ ಮಾಡಿದರೆ ನಮ್ಮನ್ನು ಗಣನೆಗೆ ತೆಗೆದುಕೊಳ್ಳದೇ ಗೇಟ್ ಆಚೆ ನಿಲ್ಲಿಸಲಾಗಿದೆ. ಅವರು ತೆರಳಿದ ನಂತರ ನಮ್ಮನ್ನು ಒಳ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದು ಹೇಯ ಕೃತ್ಯ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಇದರ ಹಿಂದಿರುವ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಂತ್ರಸ್ತ ಮಹಿಳೆಗೆ ₹5 ಲಕ್ಷ ಪರಿಹಾರ ನೀಡಿ, ಸರ್ಕಾರಿ ನೌಕರಿ, ವಾಸಕ್ಕೆ ಮನೆ, ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದರು.
ಸಂತ್ರಸ್ತೆಯನ್ನು ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತೀರಿ. ಚಾರಿತ್ರ್ಯ ಹರಣ ಮಾಡುತ್ತೀರಿ. ಜೀವನ ಭದ್ರತೆ ಕಲ್ಪಿಸಿ ಮಹಿಳೆಯನ್ನು ಅಂಥ ಕೃತ್ಯದಿಂದ ಬಿಡಿಸಬೇಕು ಎಂದು ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿದ ಕಾರ್ಯಕರ್ತೆಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಕರೆಸುವಂತೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಮಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ ಎಂದು ಹರಿಹಾಯಯ್ದರು. ಪೊಲೀಸರು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರನ್ನು ಕರೆಸಿದ ನಂತರ ಅವರಿಗೆ ಘಟನೆಯನ್ನು ತಿಳಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಘಟನೆಯನ್ನು ಖಂಡಿ ಸುತ್ತೇನೆ. ಈಗಾಗಲೇ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಎಸ್ಪಿಯವರಿಗೆ ತಿಳಿಸಿದ್ದೇನೆ. ಸದ್ಯ ಪರಿಹಾರ ವಿತರಿಸಲಾಗಿದೆ ಎಂದರು. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪವಿಭಾಗಧಿಕಾರಿ ಪ್ರಶಾಂತ ಹನಗಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಪ್ರತಿಭಟನಾಕಾರರ ಮನವೊಲಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ದಾವಲ ಸಾಬ ನದಾಫ್, ಜನವಾದಿ ಮಹಿಳಾ ಸಂಘಟನೆ ಸಂಚಾಲಕಿ ಸವಿತಾ ಪೂಜಾರಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ಮಹಿಳಾ ಉಪ ಸಮಿತಿಯ ಜಿಲ್ಲಾ ಸಂಚಾಲಕಿ ರಂಗಮ್ಮ ಕಟ್ಟಿಮನಿ ಸೇರಿದಂತೆ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.