ಯಾದಗಿರಿ: ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾದ ಸುರಪುರ ಮತಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ ನಿಗದಿಯಾಗಿದ್ದು, ಈಗ ‘ಶಾಲು’ ರಾಜಕೀಯ ಗಮನ ಸೆಳೆಯುತ್ತಿದೆ.
ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲನಾಯಕ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ನರಸಿಂಹ ನಾಯಕ (ರಾಜೂಗೌಡ) ಅದೃಷ್ಟ ಪರೀಕ್ಷೆಗೆ ಇಳಿದ್ದಾರೆ.
ನಾಮಪತ್ರ ಸಲ್ಲಿಸುವಾಗಲು ಶಾಲು:
ಸುರಪುರ ಮತಕ್ಷೇತ್ರದಲ್ಲಿ ನಾಯಕ ಮತ್ತು ಕುರುಬ ಸಮುದಾಯದವರು ಹೆಚ್ಚಿದ್ದು, ನಿರ್ಣಾಯಕ ಮತದಾರರಾಗಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸುವಾಗ ಕಂಬಳಿ, ಹಸಿರು ಶಾಲು ಹಾಕಿಕೊಳ್ಳುವ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕ್ಷೇತ್ರದ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.
ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕುರುಬ ಸಮುದಾಯವನ್ನು ಪ್ರತಿನಿಧಿಸುವ ಶಾಲು ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ.
‘ಕೈ’ಗೆ ಎಎಪಿ ಬೆಂಬಲ: ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸುರಪುರ ಎಎಪಿ ಮುಖಂಡರು ಬೆಂಬಲ ನೀಡುವ ಮೂಲಕ ಪ್ರಚಾರಗಳಲ್ಲಿ ಭಾಗಿಯಾಗಿದ್ದಾರೆ.
ಕೇಂದ್ರದ ಇಂಡಿಯಾ ಒಕ್ಕೂಟದ ಹೊಂದಾಣಿಕೆಯಂತೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಹಾಗೂ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಜತೆಗೆ ಹೊಂದಾಣಿಕೆ ಇರುವುದರಿಂದ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಗುತ್ತೇದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ.
ಶತ್ರುಗಳ ಒಂದಾಗಿಸಿದ ಚುನಾವಣೆ ಸುರಪುರ ಉಪ ಚುನಾವಣೆ ಶತ್ರುಗಳು ಒಂದಾಗುವಂತೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲಿದ್ದ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ನಲ್ಲಿದ್ದ ಮುಖಂಡರು ಬಿಜೆಪಿ ಸೇರಿದ್ದಾರೆ. ಈ ಮೂಲಕ ಚುನಾವಣೆಗಾಗಿ ಶತ್ರುಗಳು ಒಂದಾಗಿದ್ದಾರೆ. ಒಂದೇ ಕಾರಿನಲ್ಲಿ ಪ್ರಯಾಣ ಮಾಡಿ ಗ್ರಾಮಗಳಲ್ಲಿ ಪ್ರಚಾರ ಕಾರ್ಯಗಳಲ್ಲಿ ಮುಖಂಡರು ತೊಡಗಿಸಿಕೊಂಡಿದ್ದಾರೆ.