ಯಾದಗಿರಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ₹500 ಕೋಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯಾದಗಿರಿ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರೂ ಆದ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ಯಡಿಯೂರಪ್ಪ ನಿವಾಸದಲ್ಲಿ ಭೇಟಿ ಮಾಡಿದ ಯಾದಗಿರಿ ಮಹಾಸಭಾ ನಿಯೋಗ ಅಭಿನಂದಿಸಿತು.
ಸಮಾಜದ ಬಂಧುಗಳಿಗೆ ನಿಗಮವು ನವ ಮನ್ವಂತರ ಸೃಷ್ಟಿಸಬಲ್ಲುದು ಎಂದು ಅಭಿಪ್ರಾಯಪಟ್ಟ ಮುಖಂಡರು, ಐತಿಹಾಸಿಕ ಕ್ರಮ ಕೈಗೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮಾಜದ ಎಂದೆಂದಿಗೂ ನೆನಪಿನಲ್ಲಿಡುತ್ತದೆ ಎಂದರು.
ಬಹುವರ್ಷಗಳ ಕನಸನ್ನು ನನಸು ಮಾಡಿದಂತೆ ಸಮಾಜಕ್ಕೆ ಮೀಸಲಾತಿಯಲ್ಲಿ ಶೇ 14 ರಷ್ಟು ಪ್ರಮಾಣ ದೊರಕುವಂತೆ ಕ್ರಮ ಕೈಗೊಳ್ಳಬೇಕೆಂದು ಮುಖಂಡರು ಇದೇ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶಾಸಕ ವೆಂಕಟರೆಡ್ಡಿ ಮುದ್ನಾಳ, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಆರ್. ಮಹಾದೇವಪ್ಪ ಅಬ್ಬೆತುಮಕೂರು, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಸಿದ್ದಪ್ಪ ಹೊಟ್ಟಿ, ಚಂದ್ರಶೇಖರ ಅರಳಿ, ಬಸವರಾಜ ಕನ್ಯಾಕೌಳೂರು, ಬಸವರಾಜಯ್ಯ ಸ್ವಾಮಿ ಹಿರೇಮಠ ಬದ್ದೇಪಲ್ಲಿ ಇದ್ದರು.