ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ । 4 ತಿಂಗಳಿಂದ ಸಿಎಚ್‌ಒಗಳಿಗೆ ವೇತನವಿಲ್ಲ

ಜೀವನ ನಿರ್ವಹಣೆಗೆ ಸಾಲದ ಮೊರೆ ಹೊದ ಆರೋಗ್ಯ ಇಲಾಖೆ ಸಿಬ್ಬಂದಿ
Last Updated 20 ಜನವರಿ 2023, 23:15 IST
ಅಕ್ಷರ ಗಾತ್ರ

ಯಾದಗಿರಿ: ಆರೋಗ್ಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಗಳು ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೇ ಪರದಾಡುತ್ತಿದ್ದಾರೆ.

ಕೆಲವರಿಗೆ ಸೆಪ್ಟೆಂಬರ್‌, ಅಕ್ಟೋಬರ್‌ನಿಂದ ವೇತನ ಜಮಾ ಆಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ಸಾಲದ ಮೊರೆ ಹೋಗಿದ್ದಾರೆ.

ಜಿಲ್ಲೆಯಲ್ಲಿ 148 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಆರೋಗ್ಯ ಕೇಂದ್ರದ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ನಿರ್ವಹಿಸುತ್ತಿವೆ.

ಜಿಲ್ಲೆಯವರು ಮಾತ್ರವಲ್ಲದೇ ಹೊರ ಜಿಲ್ಲೆಯವರು ಸಿಎಚ್‌ಒಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಡಿಗೆ ಪಾವತಿಸದ ಕಾರಣ ಮಾಲೀಕರು ಮನೆ ಬಿಡುವಂತೆ ತಿಳಿಸಿದ್ದಾರೆ. ಇದರಿಂದ ದಿಕ್ಕೆ ತೋಚುತ್ತಿಲ್ಲ ಎಂದು ಸಮುದಾಯ ಆರೋಗ್ಯ ಅಧಿಕಾರಿಗಳ ಅಳಲಾಗಿದೆ.

‘ಕಳೆದ ಐದು ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಸಮುದಾಯ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಆದರೆ, ನಮ್ಮಿಂದ ಹಲವಾರು ಸೇವೆಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ, ಸರಿಯಾದ ಸಮಯಕ್ಕೆ ವೇತನ ಸೇರಿದಂತೆ ಭತ್ಯೆ ನೀಡುವುದಿಲ್ಲ. ಇದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ’ ಎಂದು ಸಿಎಚ್‌ಒ ಒಬ್ಬರು ಅಳಲು ತೊಡಿಕೊಂಡರು.

‘ಜಿಲ್ಲೆಯಲ್ಲಿ ಆರು ತಾಲ್ಲೂಕುಗಳಲ್ಲಿ 148 ಸಿಎಚ್‌ಒಗಳಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. 15 ಅಂಶಗಳನ್ನು ಆರೋಗ್ಯ ಕೇಂದ್ರದಲ್ಲಿ ನಿರ್ವಹಿಸಬೇಕು. ಅದರ ಜೊತೆಗೆ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕು. ಆದರೆ, ವೇತನ ಮಾತ್ರ ಸರಿಯಾಗಿ ನೀಡುತ್ತಿಲ್ಲ’ ಎನ್ನುತ್ತಾರೆ ಅವರು.

‘ಗರ್ಭಿಣಿಯರ ತಪಾಸಣೆ, ಟಿ.ಬಿ., ಲಸಿಕೆ, ಆರೋಗ್ಯ ತಪಾಸಣೆ, ರಕ್ತ ತಪಾಸಣೆ ಸೇರಿ ಪ್ರತಿ ನಿತ್ಯ ಇಲಾಖೆ ನಿಗದಿಪಡಿಸಿದ 15 ಇಂಡಿಕೇಟರ್‌ಗಳನ್ನು ಭರ್ತಿ ಮಾಡಿ ವರದಿ ಸಲ್ಲಿಸಬೇಕು. 15 ಅಂಶಗಳನ್ನು ಸರಿಯಾಗಿ ಮಾಡಿದರೆ ₹8 ಸಾವಿರ ಇನ್ಸೆಂಟಿವ್‌ ನೀಡಲಾಗುತ್ತಿದೆ. ಶೇ 60ರಿಂದ 70 ಮಾಡಿದರೆ ₹6ರಿಂದ 7 ಸಾವಿರ ನೀಡಲಾಗುತ್ತಿದೆ. ಇದು ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮಾಹಿತಿ ನೀಡುತ್ತಾರೆ.

***

ಸಮುದಾಯ ಆರೋಗ್ಯ ಅಧಿಕಾರಿಗಳ ವಿವರ

ಯಾದಗಿರಿ;52

ಶಹಾಪುರ;54

ಸುರಪುರ;42

ಒಟ್ಟು;148

***

13 ಸಿಎಚ್‌ಒಗಳಿಗೆ ಬಿಡುಗಡೆಗೆ ಪತ್ರ

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ 13 ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಬಿಡುಗಡೆಗೆ ಜಿಲ್ಲಾ ಆರೋಗ್ಯ ಇಲಾಖೆ ಸರ್ಕಾರಕ್ಕೆ ಪತ್ರ ಬರೆದಿದೆ. ಮೆದುಳು ಜ್ವರ ಲಸಿಕಾರಣದಲ್ಲಿ ಭಾಗವಹಿಸದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಸುರಪುರ ತಾಲ್ಲೂಕಿನ ಪೇಠಅಮ್ಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ 5, ಶಹಾಪುರ ತಾಲ್ಲೂಕಿನ ಹತ್ತಿಗೂಡುರು, ಗೋಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 8 ಸಿಎಚ್ಒಗಳನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

‘ಮೆದುಳು ಜ್ವರ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಕಾರಣ 13 ಜನರನ್ನು ಬಿಡುಗಡೆ ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಮೇಲೆ ಒಬ್ಬರನ್ನು ವಜಾಗೊಳಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಗುರುರಾಜ ಹಿರೇಗೌಡರ್‌ ತಿಳಿಸಿದ್ದಾರೆ.

***

ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಕೆಲ ತಿಂಗಳಿಂದ ವೇತನ ಸಮಸ್ಯೆಯಾಗಿದೆ. ಈಗ ಖಜಾನೆ–2ನಿಂದ ವೇತನ ಬಿಡುಗಡೆಯಾಗಬೇಕು. ಮೊದಲು ನೇರವಾಗಿ ಆಗುತ್ತಿತ್ತು. ಶೀಘ್ರದಲ್ಲೇ ವೇತನ ಜಮಾ ಆಗಲಿದೆ

-ಡಾ.ಗುರುರಾಜ ಹಿರೇಗೌಡರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

***

ಕೆಲವರಿಗೆ ಐದು, ನಾಲ್ಕು ತಿಂಗಳಿಂದ ವೇತನ ಜಮಾ ಆಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. 13 ಜನರನ್ನು ಸೇವೆಯಿಂದ ಬಿಡುಗಡೆಗೊಳಿಸಿರುವುದು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು

-ಕ್ರಿಸ್ಟೋಫರ್‌, ಜಿಲ್ಲಾಧ್ಯಕ್ಷ, ಜಿಲ್ಲಾ ಸಮುದಾಯ ಅರೋಗ್ಯ ಅಧಿಕಾರಿ ಸಂಘ

***

ನಾಲ್ಕು ತಿಂಗಳು ವೇತನ ಇಲ್ಲದೇ ತುಂಬಾ ಕಷ್ಟ ಪಡುತ್ತಿದ್ದೇವೆ. ಕೆಲಸ ಮಾತ್ರ ಸರಿಯಾಗಿ ಮಾಡಬೇಕು. ವೇತನ ಕೇಳುವಂತೆ ಇಲ್ಲ. ಬೇರೆ ಜಿಲ್ಲೆಗಳಿಲ್ಲದ ಸಮಸ್ಯೆ ಈ ಜಿಲ್ಲೆಯಲ್ಲಿ ಮಾತ್ರ ಸಮಸ್ಯೆಯಾಗಿದೆ

-ಹೆಸರು ಬಹಿರಂಗ ಪಡಿಸದ ಸಿಎಚ್‌ಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT