ಯಾದಗಿರಿ: ಗಂಡುಮಕ್ಕಳಂತೆ ಹೆಣ್ಣುಮಕ್ಕಳಿಗೂ ಪೋಷಕರು ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ ಸಲಹೆ ನೀಡಿದರು.
ನಗರದ ಸ್ಟೇಷನ್ ಬಜಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ ಯೋಜನೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಮಹಿಳೆಯರಿಗೆ ಇರುವ ಸ್ಥಾನಮಾನಗಳ ಬಗ್ಗೆ ಹಾಗೂ ಸಂವಿಧಾನದಲ್ಲಿ ಮಹಿಳೆಯರಿಗೆ ಕಾನೂನು ಶಿಕ್ಷಣದ ಬಗ್ಗೆ ವಿವರಿಸಿದರು.
ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ, ಪಿಎಸ್ಐ ಕೃಷ್ಣಪ್ಪ ಸುಬೇದಾರ, ಸಿಆರ್ಪಿ ಶಿವರಾಜ ಪಾಟೀಲ, ಸರ್ಕಾರಿ ಪ್ರೌಢ ಶಾಲೆ ಮುಖ್ಯಗುರು ಬಸ್ಸಪ್ಪ ಇದ್ದರು.
ಎಂ.ಎಸ್.ಕೆ ಯೋಜನೆಯ ಜಿಲ್ಲಾ ಸಂಯೋಜಕ ಸಂಗೀತಾ ಪೂಜಾರಿ ಬೇಟಿ ಬಚಾವೋ ಬೇಟಿ ಪಡಾವೋ ಪ್ರತಿಜ್ಞಾ ವಿಧಿ ಬೋಧಿಸಿದರು. ಅಂಗನವಾಡಿ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಸಿಬ್ಬಂದಿ ಇದ್ದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಶಿವಮಂಗಳ ಎಂ.ಪ್ರಸನ್ನ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ ಎಸ್.ಸಜ್ಜನ್ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮೊದಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಸ್ಟೇಷನ್ ಬಜಾರ್ ಶಾಲೆಯಿಂದ ಜಾಗೃತಿ ಜಾಥಾ ಹಾಗೂ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಲಾಯಿತು.