ಯಾದಗಿರಿ: ಸಿಲಿಂಡರ್, ಡೀಸೆಲ್, ಪೆಟ್ರೋಲ್, ದಿನನಿತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸುಭಾಷ ವೃತ್ತದಲ್ಲಿ ಬುಧವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಗೂಳಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತೆಯರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಮಂಜುಳಾ ಗೂಳಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಅಚ್ಛೆ ದೀನ್ ಎಂದು ಜನರನ್ನು ಮರಳು ಮಾಡಿ ಜನರಿಗೆ ಆರಾಮಾಗಿ ಇರಲು ಬಿಟ್ಟಿಲ್ಲ. 15 ದಿನಗಳಲ್ಲಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಇದು ಜನಸಮಾನ್ಯರಿಗೆ ಹೊರೆಯಾಗಲಿದೆ. ಇಂಥ ಸರ್ಕಾರದ ಇದ್ದರೆಷ್ಟು ಬಿಟ್ಟರೆಷ್ಟು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಆರ್ಥಿಕ ಸಂಕಷ್ಟದಲ್ಲಿ ಬೆಲೆ ಏರಿಕೆ ಮಾಡಿರುವುದರಿಂದ ಜನ ಪರದಾಡುತ್ತಿದ್ದಾರೆ. ಮೊದಲೇ ಕೆಲಸ ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಮತ್ತಷ್ಟು ಹೊರೆಯಾಗುತ್ತಿದೆ. ಇನ್ನೊಂದು ಕಡೆ ಡೀಸೆಲ್, ಪೆಟ್ರೋಲ್ ಬೆಲೆ ಪ್ರತಿದಿನ ಏರಿಕೆಯಾಗುತ್ತಿದೆ. ಇದಕ್ಕೆ ಕಡಿವಾಣವೇ ಬೀಳುತ್ತಿಲ್ಲ. ಮಹಿಳೆಯರಿಗೆ ರಕ್ಷಣೆ ಇಲ್ಲ. ಅಡುಗೆ ಮನೆಯಲ್ಲಿ ಸಿಲಿಂಡರ್ ಬೆಲೆ ಏರಿಕೆಯಾಗಿ ಅಲ್ಲಿಯೂ ರಕ್ಷಣೆ ಇಲ್ಲ ಎಂದು ಆರೋಪಿಸಿದರು.
ದವಸ ಧಾನ್ಯಗಳ ಬೆಲೆ ಗಗನಕ್ಕೇರಿದೆ. ದುಡಿಯಲು ಕೂಲಿ ಇಲ್ಲ. ಸಾವಿರ ರೂಪಾಯಿ ಸಿಲಿಂಡರ್ ಬೆಲೆಯಾದರೆ ಹೇಗೆ ಎಂದು ಪ್ರಶ್ನಿಸಿದರು. ಈಗ ದೇಶದಲ್ಲಿ ಎಲ್ಲ ಖಾಸಗೀಕರಣವಾಗುತ್ತಿದೆ. ಅಲ್ಲದೇ ಎಲ್ಲವನ್ನು ಸರ್ಕಾರ ಮಾರಾಟ ಮಾಡುತ್ತಿದೆ. ನಮ್ಮನ್ನು ಬೇರೆ ದೇಶಕ್ಕೆ ಮಾರಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸರ್ಕಾರದ ಇಂಥ ಅವ್ಯಸ್ಥೆಯಿಂದ ರಸ್ತೆ ಮೇಲೆ ಕಟ್ಟಿಗೆ ಒಲೆ ಹಚ್ಚಿ, ಸಿಲಿಂಡರ್ ತಲೆ ಮೇಲೆ ಹೊತ್ತು ಪ್ರತಿಭಟನೆ ಮಾಡಿದ್ದೇವೆ ಎಂದರು.
ನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕಾಂಗ್ರೆಸ್ ಮುಖಂಡರಾದ ಸವಿತಾ ಮಾಲಿಪಾಟೀಲ, ರೇಣುಕಾ, ಸಿದ್ದಲಿಂಗಮ್ಮ, ಶಾಂತ ಪೂಜಾರಿ, ಮತ್ತು ಬ್ಲಾಕ್ ಅಧ್ಯಕ್ಷರು ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.