ಯಾದಗಿರಿ: ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮನೆ ಬಾಗಿಲಿಗೆ ಹೋಗಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.
ಯಾದಗಿರಿ ಮತಕ್ಷೇತ್ರದ ಕೊಳ್ಳೂರ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರು ಸಂಘಟಿಕರಾಗಿ ಈಗಿನಿಂದಲೇ ಪಕ್ಷದ ಸಂಘಟನೆಯಲ್ಲಿ ತೊಡಗಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಡಾ.ಎಸ್.ಬಿ.ಕಾಮರಡ್ಡಿ ಮಾತನಾಡಿ, ಕಳೆದ ಆರು ದಶಕದಲ್ಲಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಅದನ್ನು ಮರೆಮಾಚಿ ವಿರೋಧ ಪಕ್ಷದವರು ಟೀಕೆ ಮಾಡುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ಟೀಕಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮರಿಗೌಡ ಹುಲ್ಕಲ್, ಪಕ್ಷದ ಮುಖಂಡರಾದ ಡಾ.ಭೀಮಣ್ಣ ಮೇಟಿ ಮಾತನಾಡಿದರು.