ಯಾದಗಿರಿ: ನಗರದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕೆ ವಿತರಣೆ ತಾಲೀಮಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಚಾಲನೆ ನೀಡಿದರು.
ಲಸಿಕೆ ನೀಡಲು ಸ್ಥಾಪಿಸಲಾಗಿರುವ, ಪ್ರವೇಶ ಮತ್ತು ನೋಂದಣಿ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಕೋವಿನ್ ಸಾಫ್ಟ್ವೇರ್ನಲ್ಲಿ ನೋಂದಣಿ ಮಾಡುವ ಕ್ರಮ, ಲಸಿಕೆಯ ಸಂಗ್ರಹ, ಸಾಗಣೆ, ಡಿ-ಫ್ರೀಜ್ ಕಾರ್ಯಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೂ ತಾಲೀಮು ಕಾರ್ಯ ವೀಕ್ಷಿಸಿದರು.
ಜಿಲ್ಲೆಯಲ್ಲಿ ಐದು ಸರ್ಕಾರಿ ಹಾಗೂ ಒಂದು ಖಾಸಗಿ ಆಸ್ಪತ್ರೆ ಸೇರಿದಂತೆ 6 ಕಡೆ ಲಸಿಕಾ ಪ್ರಯೋಗ ನಡೆಸಲಾಗುತ್ತಿದೆ. ಮುಂದೆ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಾರಿಯರ್ಸ್ಗಳಿಗೆ ಲಸಿಕೆ ನೀಡಲು 53 ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಈಗಾಗಲೇ ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿ ಅಲ್ಲಿನ ಎಲ್ಲ ಸಿಬ್ಬಂದಿ ವರ್ಗದ ಮಾಹಿತಿ ಸಂಗ್ರಹಿಸಲಾಗಿದೆ. ಇನ್ನೂ ಹೆಸರುಗಳಿದ್ದರೆ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೂತನ ಜಿಲ್ಲಾಸ್ಪತ್ರೆಯ ಮುಖ್ಯಸ್ಥ ಡಾ.ಸಂಜೀವಕುಮಾರ ರಾಯಚೂರಕರ್, ಆರ್ಎಂಒ ವಿಭಾಗದ ಮುಖ್ಯಸ್ಥೆ ಡಾ.ನೀಲಮ್ಮ, ದಂತ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಪ್ರಸಾದ್, ಬಿಎನ್ಟಿ ವಿಭಾಗದ ಮುಖ್ಯಸ್ಥ ಡಾ.ರಾಮನಗೌಡ ಇದ್ದರು.
***
ಜಿಲ್ಲೆಯ ಆರು ಕಡೆ ಕೊವೀಡ್ ಲಸಿಕೆ ತಾಲೀಮು
ಯಾದಗಿರಿ: ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಲಸಿಕೆ ತಾಲೀಮುಗೆ ಜಿಲ್ಲೆಯಲ್ಲಿ 6 ಕಡೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಡ್ರೈರನ್ ಆರಂಭ ಮಾಡಲಾಗಿದೆ.
ಯಾದಗಿರಿ ಜಿಲ್ಲಾಸ್ಪತ್ರೆ, ಯರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರ, ಶಹಾಪುರ ಸಾರ್ವಜನಿಕ ಆಸ್ಪತ್ರೆ, ಸುರಪುರ ನಗರ ಆರೋಗ್ಯ ಕೇಂದ್ರ, ವಡಗೇರಾ ಸಮುದಾಯ ಆರೋಗ್ಯ ಕೇಂದ್ರ, ಯಾದಗಿರಿ ಖಾಸಗಿ ಆಸ್ಪತ್ರೆ ವಿಬಿಆರ್ ಮುದ್ನಾಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋವಿಡ್ ಡ್ರೈರನ್ ಮಾಡಲಾಗಿದೆ.
ಇದಕ್ಕಾಗಿ 6 ತಂಡ ರಚಿಸಿ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ 30 ಜನರ ನಿಯೋಜನೆ ಮಾಡಲಾಗಿದೆ. 1 ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್ಗಳಿಗೆ ಡ್ರೈರನ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇಂದುಮತಿ ಪಾಟೀಲ ಮಾಹಿತಿ ನೀಡಿದ್ದಾರೆ.