ಮಕ್ಕಳೊಂದಿಗೆ ಸಂವಾದ ನಡೆಸಿದ ಡಿಸಿ

ಯಾದಗಿರಿ: ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರೌಢ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಜೊತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಂವಾದ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಸಂವಾದ ನಡೆಸಿದ ಅವರು, ಬಹು ಆಸಕ್ತಿಯಿಂದ ವಿವಿಧ ಪ್ರಶ್ನೆಗಳನ್ನು ಕೇಳುತ್ತಾ ವಿದ್ಯಾರ್ಥಿಗಳ ಭವಿಷ್ಯದ ಗುರಿಗಳು ಮತ್ತು ಅವರ ಅಭಿಲಾಷೆಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ಕಾರ್ಯಕ್ರಮ ಪ್ರಾರಂಭಿಸುವ ಮುನ್ನ ತಮ್ಮ ಪರಿಚಯ ಜೊತೆಗೆ ಎಲ್ಲ ವಿದ್ಯಾರ್ಥಿ–ವಿದ್ಯಾರ್ಥಿನಿಯರ ಪರಿಚಯ ಮಾಡಿಕೊಂಡು, ಅವರು ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ ನೀಡಿದರು.
ವಿದ್ಯಾರ್ಥಿಗಳು ಹೇಳಿದ ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಪರಿಸರದ ಕಾಳಜಿ ಇರಬೇಕು. ಹೆತ್ತವರನ್ನು ಹಾಗೂ ನಾಡನ್ನು ಎಂದಿಗೂ ಮರೆಯಬಾರದೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಮಾತನಾಡಿ, ಗುಣಮಟ್ಟ ಶಿಕ್ಷಣ ಪಡೆಯಬೇಕಾದರೆ ಕಠಿಣ ಪರಿಶ್ರಮ ಪಡಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಸೆಲೆಯಾಗಿ ಶಬ್ಧಕೋಶ ಹಾಗೂ ಪೆನ್ ನೀಡಿ ಉತ್ತಮ ಭವಿಷ್ಯಕ್ಕೆ ಶುಭಕೋರಿದರು.
ಜಿಲ್ಲಾಧಿಕಾರಿ ನಿರ್ದೇಶನದಂತೆ ಜಿಲ್ಲಾಧಿಕಾರಿ ಕಚೇರಿಯ ವಿವಿಧ ಶಾಖೆಗಳ ಪರಿಚಯ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಹಾಗೂ ಉಪವಿಭಾಗಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತಿ ಮತ್ತು ವಿವಿಧ ಕಡೆ ಭೇಟಿ ನೀಡಿ ವೀಕ್ಷಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು ಮಾರ್ಗದರ್ಶನ ನೀಡಲಾಯಿತು.
ಡಿಡಿಪಿಐ ಶಾಂತಗೌಡ ಪಾಟೀಲ, ವಿಷಯ ಪರಿವೀಕ್ಷಕರಾದ ಬಸಣ್ಣಗೌಡ ಆಲ್ದಾಳ, ಹಣಮಂತ, ಮುಖ್ಯಗುರುಗಳಾದ ಸುರೇಶ್, ಬಾಲಕೃಷ್ಣ, ಹರೀಶ್, ಎಚ್.ಬಿ. ಹವಾಲದಾರ, ಅಲ್ತಾಫ್, ಪಾಂಡುರಂಗ, ಸಿದ್ದಾರಾಮ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.