ಶಹಾಪುರ: ‘ಸರ್ಕಾರಿ ಸವಲತ್ತುಗಳನ್ನು ಸಕಾಲದಲ್ಲಿ ಜನರಿಗೆ ಒದಗಿಸಬೇಕು. ಜನರನ್ನು ಅನವಶ್ಯಕವಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸಬೇಡಿ. ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು’ ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್ ತಿಳಿಸಿದರು.
ನಗರದ ತಹಶೀಲ್ದಾರ್ ಕಚೇರಿಗೆ ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಿ ಅವರು ಅಧಿಕಾರಿಗಳ ಜತೆ ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಸಮೀಕ್ಷೆಗಾಗಿ ಭೇಟಿ ನೀಡಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಂದ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡರು. ವಿವಿಧ ಇಲಾಖೆಗೆ ಸಂಬಂಧಿಸಿದಂತೆ 11 ಅಹವಾಲುಗಳನ್ನು ಅವರು ಸ್ವೀಕರಿಸಿದರು.
ತಾಲ್ಲೂಕಿನಲ್ಲಿ ಖಾಸಗಿ ಕಂಪನಿ ಒಂದು ನಕಲಿ ಹತ್ತಿ ಬೀಜವನ್ನು ವಿತರಿಸಿದೆ. ಕಂಪನಿಯ ವಿರುದ್ಧ ವಂಚನೆಯ ಕೇಸು ದಾಖಲಿಸಬೇಕು ಎಂದು ಪ್ರಾಂತ ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಅವರು ಕೃಷಿ ಇಲಾಖೆಯ ಸಿಬ್ಬಂದಿ ನಷ್ಟಕ್ಕೆ ಒಳಗಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಎ.ಡಿ ಸುನೀಲಕುಮಾರ ಅವರಿಗೆ ಸೂಚಿಸಿದರು.
ವಾಲ್ಮೀಕಿ ಭವನಕ್ಕೆ ಭೇಟಿ: ನಗರದ ಹೊರವಯದಲ್ಲಿರುವ ನಿರ್ಮಾಣದ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಅಧಿಕಾರಿಳಿಗೆ ತಾಕೀತು ಮಾಡಿದರು.
ಆಸ್ಪತ್ರೆಗೆ ಭೇಟಿ: ನಗರದ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ವೈದ್ಯರು ಸರಿಯಾದ ಸಮಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಔಷಧಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗೆ ಸೂಚಿಸಿದರು.