ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ ಸರಳ ಆಚರಣೆಗೆ ನಿರ್ಧಾರ

ಫೇಸ್‍ಬುಕ್, ಯೂಟ್ಯೂಬ್‍ನಲ್ಲಿ ಕಾರ್ಯಕ್ರಮ ನೇರಪ್ರಸಾರ: ಡಾ.ರಾಗಪ್ರಿಯಾ
Last Updated 11 ಸೆಪ್ಟೆಂಬರ್ 2020, 16:35 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಸೆಪ್ಟೆಂಬರ್ 17ರಂದು ಆಚರಿಸಬೇಕು. ಜೊತೆಗೆ ಕೋವಿಡ್-19 ಹಿನ್ನೆಲೆಯಲ್ಲಿ ಅಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯ ಎಲ್ಲರಿಗೂ ದೊರಕುವಂತಾಬೇಕು ಮತ್ತು ಫೇಸ್‍ಬುಕ್, ಯೂ ಟ್ಯೂಬ್ ಹಾಗೂ ಟಿವಿ ಚಾನೆಲ್‍ಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಸಾರ್ವಜನಿಕರು ತಾವಿದ್ದಲ್ಲಿಯೇ ನೇರವಾಗಿ ಕಾರ್ಯಕ್ರಮ ವೀಕ್ಷಿಸಬಹುದು ಎಂದು
ತಿಳಿಸಿದರು.

ಸೆ.17ರಂದು ಬೆಳಿಗ್ಗೆ 7ರಿಂದ 8 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಧ್ವಜಾರೋಹಣ ನೆರವೇರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಆಚರಣೆ ಮಾಡಬೇಕು ಎಂದು
ಸೂಚಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ಬೆಳಿಗ್ಗೆ 8.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಾಮೂಹಿಕ ಕವಾಯಿತುನಲ್ಲಿ ಪೊಲೀಸ್ ಇಲಾಖೆಯಿಂದ-1, ಗೃಹರಕ್ಷಕ ದಳ-1, ಅಗ್ನಿಶಾಮಕ-1 ಹಾಗೂ ಅರಣ್ಯ ಇಲಾಖೆಯ-1 ಒಟ್ಟು 4 ತಂಡಗಳು ಭಾಗವಹಿಸಬೇಕು. ಕವಾಯತ್‍ನಲ್ಲಿ ಪಾಲ್ಗೊಳ್ಳುವವರಿಗೆ ಮೂರು ದಿನಗಳ ತರಬೇತಿ ಅವಧಿಯಲ್ಲಿ ಲಘು ಉಪಾಹಾರದ ವ್ಯವಸ್ಥೆ ಮಾಡಲು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಉಪವಿಭಾಗಾಧಿಕಾರಿಶಂಕರಗೌಡ ಸೋಮನಾಳ ಅವರು ಸಭೆಯ ನಡಾವಳಿಗಳನ್ನು ಓದಿದರು.
‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಪಂಚಾಯಿತಿಯ ಅಧಿಕಾರಿ ಗುರುನಾಥ ಎನ್.ಗೌಡಪ್ಪನವರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ, ಪ್ರಭಾರಿ ನಗರಸಭೆ ಪೌರಾಯುಕ್ತ ಬಕ್ಕಪ್ಪ, ತಹಶೀಲ್ದಾರ್ ಸೋಫಿಯಾ ಸುಲ್ತಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಭಾವೈಕ್ಯತಾ ಸಮಿತಿಯ ಬಾಬು ದೋಖಾ, ಸಿದ್ದಾರಡ್ಡಿ ಬಲ್‍ಕಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT