ಕೆಂಭಾವಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯ ಒದಗಿಸುವಂತೆ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ಆಗ್ರಹಿಸಿದೆ.
ಬುಧವಾರ ಉಪ ತಹಶೀಲ್ದಾರ್ ಮಲ್ಲಿಕಾರ್ಜು ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವೇದಿಕೆ ಮುಖಂಡರುಗಳು, ಸಮುದಾಯ ಆರೋಗ್ಯ ಕೇಂದ್ರವೆಂದು ಮೇಲ್ದರ್ಜೆಗೇರಿ 8 ವರ್ಷ ಕಳೆದರೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಗಬೇಕಾದ ಸೌಲಭ್ಯಗಳು ಮಾತ್ರ ದೊರೆಯುತ್ತಿವೆ. ಈ ಕುರಿತು ಹಲವು ಸಲ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
25 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ ಪಟ್ಟಣದಲ್ಲಿ ನಿತ್ಯ 300 ರಿಂದ 400 ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಸೌಲಭ್ಯ ಮಾತ್ರ ಮರೀಚಿಕೆಯಾಗಿವೆ. ಕೂಡಲೇ ಇಲ್ಲಿ ಸಿಬ್ಬಂದಿ ಸೇರಿದಂತೆ ಅಗತ್ಯ ಸೌಲಭ್ಯ ಒದಗಸಿಬೇಕು, ನಿರ್ಲಕ್ಷ ವಹಿಸಿದರೆ ಮುಂಬರುವ ದಿನಗಳಲ್ಲಿ ಹೋರಾಟ ಮಾಡುವುದು ಎಂದು ಎಚ್ಚರಿಸಿದರು.