ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕೃತಿ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ

ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸೂಚನೆ
Last Updated 24 ಮೇ 2019, 20:31 IST
ಅಕ್ಷರ ಗಾತ್ರ

ಯಾದಗಿರಿ: ಮುಂಗಾರು ಪೂರ್ವ ಮತ್ತು ನಂತರದಲ್ಲಿ ಸಂಭವಿಸುವ ಹಲವು ರೀತಿಯ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಸಂಬಂಧಪಟ್ಟ ಇಲಾಖೆಗಳು ಪೂರ್ವಭಾವಿಯಾಗಿ ಯೋಜನೆ ರೂಪಿಸಿ ಸನ್ನದ್ಧರಾಗಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ಅಧಿಕಾರಿಗಳ ಸಹಯೋಗದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧತೆ ಹಾಗೂ ಸ್ಪಂದನಾ ಯೋಜನೆಯ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮುಂಜಾಗ್ರತಾ ಕ್ರಮ ಅನುಸರಿಸಿ:
ಯಾವುದಾದರೂ ಪ್ರಕೃತಿ ವಿಕೋಪ ಸಂಭವಿಸಿದಾಗ ಮಾತ್ರ ಎಚ್ಚೆತ್ತುಕೊಳ್ಳದೆ, ಪೂರ್ವಭಾವಿಯಾಗಿ ವಿಕೋಪ ನಿರ್ವಹಣೆಗೆ ಸಿದ್ಧರಾಗಿರಬೇಕು. ನೆರೆ ಹಾವಳಿ ಅಥವಾ ಇನ್ನಿತರ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಕಂದಾಯ ಇಲಾಖೆ, ಪಶುಪಾಲನಾ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳು ಏನು ಮಾಡಬೇಕೆಂಬುದರ ಬಗ್ಗೆ ತಿಳಿದಿರಬೇಕು. ಮಳೆ, ಗಾಳಿ, ಸಿಡಿಲಿನಂತಹ ಸಂದರ್ಭಗಳಲ್ಲಿ ಜನ- ಜಾನುವಾರು ರಕ್ಷಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ 2009ರಲ್ಲಿ ಸಂಭವಿಸಿದ ನೆರೆ ಹಾವಳಿ ಸಂದರ್ಭದಲ್ಲಿ ಯಾವ ಹಳ್ಳಿಗಳಿಗೆ ತೊಂದರೆ ಉಂಟಾಗಿತ್ತು ಎನ್ನುವುದರ ಕುರಿತು ಪಟ್ಟಿ ಮಾಡಬೇಕು. ಹಿಂದಿನ ವರ್ಷಗಳಲ್ಲಿ ಸಿಡಿಲಿನಿಂದ ಮೃತಪಟ್ಟವರು, ನೆರೆ ಹಾವಳಿ ಮತ್ತು ಅದರ ಪರಿಣಾಮದ ಕುರಿತು ಮಾಹಿತಿ ಸಂಗ್ರಹಿಸಿ, ಇದರ ಆಧಾರದ ಮೇಲೆ ಮುಂದೆ ಸಂಭವಿಸುವ ವಿಕೋಪಗಳ ನಿರ್ವಹಣೆಗೆ ಸನ್ನದ್ಧರಾಗಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಸರ್ಕಾರಿ ಬೋಟ್‍ಗಳ ಜೊತೆಗೆ ಖಾಸಗಿ ಬೋಟ್‍ಗಳು ಎಷ್ಟಿವೆ? ಈಜು ತಜ್ಞರು ಎಷ್ಟು ಜನ ಇದ್ದಾರೆ? ಮತ್ತು ಅವರ ವಿವರಗಳು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಸಂಗ್ರಹ ಇರಬೇಕು. ಇದರಿಂದ ನೆರೆ ಹಾವಳಿ ಮತ್ತು ಇನ್ನಿತರ ಸಂದರ್ಭಗಳಲ್ಲಿ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ ಮಾತನಾಡಿ, ಸರಕಾರದ ಎಲ್ಲಾ ಇಲಾಖೆಗಳು ಸಮನ್ವಯತೆ, ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಜಿಲ್ಲೆಯಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇಂತಹ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಮಾತನಾಡಿ, ಕರ್ನಾಟಕ ಸರ್ಕಾರದಿಂದ ತಯಾರಿಸಿದ ’ಸಿಡಿಲು’ ಆ್ಯಪ್ ಅನ್ನು ಪ್ರತಿಯೊಬ್ಬರೂ ಡೌನ್‍ಲೋಡ್ ಮಾಡಿಕೊಳ್ಳಬೇಕು. ಇದರಿಂದ ಹವಾಮಾನ ಮುನ್ಸೂಚನೆ ಮತ್ತು ಮುಂಜಾಗ್ರತಾ ಕ್ರಮಗಳ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕ ಅಲೆಕ್ ಲೋಬೋ ಅವರು ಜಿಲ್ಲಾ ಮಟ್ಟದ ವಿಕೋಪ ನಿರ್ವಹಣೆಯ ಯೋಜನೆ ತಯಾರಿಕೆ, ಪುನರ್‌ ಪರಿಶೀಲನೆಯಲ್ಲಿ ಜಿಲ್ಲಾಡಳಿತದ ಜವಾಬ್ದಾರಿಗಳು ಹಾಗೂ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆಯ ವಿವಿಧ ಹಂತಗಳು, ವಿಕೋಪ ನಿರ್ವಹಣೆಯ ವಿವಿಧ ಹಂತಗಳಲ್ಲಿ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು, ಸಮುದಾಯ, ಶಾಲಾ- ಕಾಲೇಜುಗಳು, ಸಂಘ-ಸಂಸ್ಥೆಗಳ ಪಾತ್ರ ಕುರಿತು ತರಬೇತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ.ಕುಲಕರ್ಣಿ, ಡಿವೈಎಸ್‍ಪಿ ಯು.ಶರಣಪ್ಪ, ಜಿಲ್ಲಾ ತರಬೇತಿ ಸಂಸ್ಥೆಯ ಅಂಬೋಜಿ ನಾಯ್ಕೋಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪಾಟೀಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಆರ್.ದೇವಿಕಾ, ತಹಶೀಲ್ದಾರ್ ಶಿವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT