ಯಾದಗಿರಿ: ಜಿಲ್ಲೆಯ ನೂತನ ಕಲ್ಲುಪುಡಿ ಘಟಕಗಳಿಗೆ ಅನುಮತಿ ಕೋರಿ ಬಂದಿರುವ ಪ್ರಸ್ತಾವನೆ ಸೇರಿದಂತೆ ಚಾಲ್ತಿಯಲ್ಲಿರುವ ಘಟಕಗಳ ಮತ್ತು ಕಲ್ಲುಪುಡಿ ಮಾಡುವ ಘಟಕಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾ ಕಲ್ಲುಪುಡಿ ಘಟಕಗಳ ಲೈಸನ್ಸ್ ನೀಡಿಕೆ ಹಾಗೂ ನಿಯಂತ್ರಣ ಪ್ರಾಧಿಕಾರ ಸಮಿತಿ ಮತ್ತು ಜಿಲ್ಲಾ ಮರಳು ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿನ ಎಲ್ಲ ಕಲ್ಲುಪುಡಿ ಮಾಡುವ ಘಟಕಗಳಿಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಿಗಳ ತಂಡವು ಭೇಟಿ ನೀಡಿ ಮಾಲಿನ್ಯ, ಭೂ ಪರಿವರ್ತನೆ, ಧೂಳು ತೊಂದರೆ ಹಾಗೂ ಹತ್ತಿರದ ಗ್ರಾಮಗಳಿಗೆ ಆಗುವ ತೊಂದರೆಗಳ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ತಿಳಿಸಿದರು.
ಸರ್ಕಾರದ ನೀತಿ ನಿಯಮಗಳನ್ನು ಕಡಾಯವಾಗಿ ಪಾಲಿಸಬೇಕು. ಘಟಕಗಳ ನವೀಕರಿಸಲು ಇಲ್ಲವೆ ಹೊಸ ಅನುಮತಿಗೆ ಕಂದಾಯ, ಅರಣ್ಯ, ಪರಿಸರ ಇಲಾಖೆ ಮತ್ತು ಭೂ ವಿಜ್ಞಾನಿಗಳು ಜಂಟಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ಬಗ್ಗೆ ಸ್ವೀಕೃತವಾದ ದೂರುಗಳ ಕುರಿತು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಎಫ್ಐಆರ್ ದಾಖಲಿಸಬೇಕೆಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನವನ್ನು ಜಿಲ್ಲಾಧಿಕಾರಿ ನೀಡಿದರು.
ಈ ವೇಳೆ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.