ಕೊಪ್ಪಳ: ಇಲ್ಲಿನವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಸಂಗಣ್ಣ ಕರಡಿ ಅವರಪುತ್ರ ಅಮರೇಶ್ ಕರಡಿ ಸ್ಪರ್ಧಿಸಲು ಬಿ. ಫಾರಂ ದೊರೆತಿದೆ.
ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರಗೌಡ ಪಾಟೀಲ್ ಹಲಗೇರಿ ಈ ವಿಷಯ ದೃಢಪಡಿಸಿದರು.
ಇದಕ್ಕೂ ಮುನ್ನ ಬಿಜೆಪಿಯ ಘೋಷಿತ ಅಭ್ಯರ್ಥಿ ಸಿ.ವಿ.ಚಂದ್ರಶೇಖರ ಸೋಮವಾರ ನಾಮಪತ್ರ ಸಲ್ಲಿಸಿದರು. ಈಗ ಅವರು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದು ಅನಿವಾರ್ಯವಾಗಿದೆ. ನಾಳೆ ಅಮರೇಶ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಸಾವಿರಾರು ಬೆಂಬಲಿಗರ ಜತೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.