ಯಾದಗಿರಿ: ‘ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಮನಸ್ಸಿಗೆ ಶಾಂತಿ, ನೆಮ್ಮದಿ ಲಭಿಸುತ್ತದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಜೆ.ಹಿಳ್ಳಿ ಹೇಳಿದರು.
ನಗರದ ಜವಾಹರ ಸಂಯುಕ್ತ ಪದವಿ ಕಾಲೇಜಿನಲ್ಲಿ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಜಾಗತೀಕರಣದ ಇಂದಿನ ದಿನಗಳಲ್ಲಿ ಮನುಷ್ಯ ತಾನು ಏನು ಮಾತನಾಡುತ್ತಿದ್ದಾನೆ ಎಂಬುದು ಅವನಿಗೆ ತಿಳಿಯದ ಸ್ಥಿತಿ ನಿರ್ಮಾಣಗೊಂಡಿದೆ. ಬದಲಾದ ಸನ್ನಿವೇಶದಲ್ಲಿ ನಾವುಗಳು ಟಿಕ್ಟಾಕ್ ಸಂಸ್ಕೃತಿಯಲ್ಲಿದ್ದೇವೆ. ನಮ್ಮ ಮಾತುಗಳೇನಿದ್ದರೂ ಮೊಬೈಲ್ ಹಾಗೂ ವಾಟ್ಸ್ ಆ್ಯಪ್ಗೆ ಸಿಮೀತಗೊಳ್ಳುತ್ತಿದೆ. ಪರಿಪೂರ್ಣ ವಿದ್ಯಾರ್ಥಿಗಳಾಗಬೇಕಾದರೆ ಪಠ್ಯದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.
ಪತ್ರಕರ್ತ ಲಕ್ಷ್ಮಿಕಾಂತ ಕುಲಕರ್ಣಿ, ವೆಂಕಟರಾವ್ ಕುಲಕರ್ಣಿ, ಪ್ರಾಂಶುಪಾಲ ಶರಣಪ್ಪ ರಾಹುಲ್, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಹಾಂತೇಶ ಕಲಾಲ್ ಹಾಗೂ ಸಂಸ್ಥೆಯ ಆಡಳಿತಾಧಿಕಾರಿ ಚನ್ನಯ್ಯ ಸ್ವಾಮಿ ಇದ್ದರು.