ಯಾದಗಿರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕುಡಿಯುವ ನೀರು, ನೈರ್ಮಲ್ಯ ಹಾಗೂ ಆರೋಗ್ಯ ಕಾರ್ಯಕ್ರಮ ಕುರಿತಂತೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಬುಧವಾರ ಚಾಲನೆ ನೀಡಿದರು.
ವಿವಿಧ ಆರೋಗ್ಯ ಸೇವೆಗಳು ಮತ್ತು ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ವಸ್ತುಪ್ರದರ್ಶನ ಏರ್ಪಡಿಸಿರುವ ಇಲಾಖೆಯ ಕಾರ್ಯವನ್ನು ಸಿಇಒ ಶ್ಲಾಘಿಸಿದರು.
ವಸ್ತು ಪ್ರದರ್ಶನದಲ್ಲಿ ನವಜಾತ ಶಿಶುಗಳ ಆರೈಕೆ, ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಜಿಲ್ಲಾ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪುನಶ್ಚೇತನಾ ಕೇಂದ್ರ ಸ್ಥಾಪನೆ, ಸಂಪೂರ್ಣ ಲಸಿಕೆ ಪರಿಪೂರ್ಣ ಆರೋಗ್ಯ ಧ್ಯೇಯ ವಾಕ್ಯದಡಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಗಳ ಕುರಿತ ಅಂಶಗಳ ಪ್ರದರ್ಶನ ಮಾಡಲಾಯಿತು.
5 ವರ್ಷದಲ್ಲಿ 7 ಬಾರಿ ತಪ್ಪದೇ ಲಸಿಕೆ ಹಾಕಿಸಬೇಕು. ಪೌಷ್ಟಿಕ ಆಹಾರ ಪುನಶ್ಚೇತನಾ ಕೇಂದ್ರಗಳ ಸ್ಥಾಪನೆ ಮೂಲಕ ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ, ರಕ್ತಹೀನತೆ ತಡೆಗಟ್ಟುವ ಬಗೆ, ಕ್ಷಯರೋಗದ ಲಕ್ಷಣಗಳು ಮತ್ತು ನಿಯಂತ್ರಣದ ಕ್ರಮಗಳು, ಡೆಂಗಿ ಮತ್ತು ಚಿಕೂನ್ಗುನ್ಯಾ ಲಕ್ಷಣಗಳು ಮತ್ತು ಮುನ್ನೆಚ್ಚೆರಿಕೆ ಕ್ರಮಗಳು ಕುರಿತು ಜಾಗೃತಿ ಮೂಡಿಸಲಾಯಿತು.
ಆರೋಗ್ಯ ಉಪಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾದರಿಯಲ್ಲಿ ಸೌಲಭ್ಯಗಳ ಒದಗಿಸುವಿಕೆ, ಮಾನಸಿಕ ಆರೋಗ್ಯ, ಜನನಿ-ಶಿಶು ಸುರಕ್ಷಾ, ತಾಯಿ ಕಾರ್ಡ್, ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರ ಸೇವನೆಯ ಕ್ರಮಗಳ ಕುರಿತ ಮಾಹಿತಿ ಒಳಗೊಂಡ ಬೃಹತ್ ಫಲಕಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಎಸ್.ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ., ಸಾರಿಗೆ ಸಂಸ್ಥೆಯ ಅಧಿಕಾರಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.