ಗುರುಮಠಕಲ್: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ರಾಜಕೀಯ ಜೀವನದ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ 29ರಂದು ಪಟ್ಟಣದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಬ್ಲಾಕ್ ಘಟಕದ ಅಧ್ಯಕ್ಷ ಮಹಿಪಾಲರೆಡ್ಡಿ ಹತ್ತಿಕುಣಿ ತಿಳಿಸಿದರು.
ಪಟ್ಟಣದಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1972ರಲ್ಲಿ ಮೀಸಲು ಕ್ಷೇತ್ರವಾಗಿದ್ದ ಗುರುಮಠಕಲ್ ವಿಧಾನಸಭಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ರಾಜಕೀಯ ಜೀವನ ಆರಂಭಿಸಿದ್ದರು. ಸರ್ಕಾರದಲ್ಲಿ ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿ ಹಂತ ಹಂತವಾಗಿ ಬೆಳೆದು ರಾಜಕೀಯ ಜೀವನದ ಅರ್ಧ ಶತಮಾನ ಕಳೆದಿದ್ದಾರೆ ಎಂದರು.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ರಾಮಲಿಂಗಾರಡ್ಡಿ, ಉಪಾಧ್ಯಕ್ಷ ಶರಣಪ್ರಕಾಶ ಪಾಟೀಲ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಹಲವು ನಾಯಕರು ಭಾಗವಹಿಸುವರು ಎಂದು ತಿಳಿಸಿದರು.
ಜಿ.ಪಂ ಮಾಜಿ ಅಧ್ಯಕ್ಷ ಬಸರೆಡ್ಡಿ ಪಾಟೀಲ ಅನಪೂರ, ಚಿದಾನಂದಪ್ಪ ಕಾಳಬೆಳಗುಂದಿ, ಕೃಷ್ಣಾ ಚಪೆಟ್ಲಾ, ಸಂಜೀವಕುಮಾರ ಚಂದಾಪುರ, ರವಿ ಕೋಟಕೊಂಡಿ, ಪಿ.ಕಿಷ್ಟಪ್ಪ, ಆನಂದ ಬೋಯಿನ್, ರಘುನಾಥರಡ್ಡಿ ನಜರಾಪುರ, ನರಸಪ್ಪ ಗಡ್ಡಲ್, ಸೈಯದ್ ಅಕ್ಬರ್, ಸಾಬಣ್ಣ ಹೂಗಾರ, ಮಹ್ಮದ್ ಅನ್ವರ್, ಚಾಂದ್ ಪಾಶಾ, ಬಾಬಾ ಇದ್ದರು.