ವಡಗೇರಾ: ಸಕಾಲದಲ್ಲಿ ಹಾಗೂ ಕಾಲಮಿತಿಯಲ್ಲಿ ಎಲ್ಲ ಕಾಮಗಾರಿಗಳನ್ನು ಮುಗಿಸಬೇಕು. ವಿಳಂಬ ಧೋರಣೆ ಅನುಸರಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಆಡಳಿತಾಧಿಕಾರಿ ಹಂಪಣ್ಣ ಸಜ್ಜನ ಎಚ್ಚರಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆ ಹಾಗೂ ತಾಪಂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸಲು ಕ್ಷೇತ್ರ ಭೇಟಿ ನೀಡಬೇಕು. ಆಗ ಕಾಮಗಾರಿಯ ಸ್ಪಷ್ಟ ಚಿತ್ರಣ ಸಿಗುತ್ತದೆ. ಹಾಗೆಯೇ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೋ ಅಲ್ಲಿ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದರು.
ತಾಲ್ಲೂಕಿನಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರ, ವಸತಿ ನಿಲಯ, ಆಸ್ಪತ್ರೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು. ಈ ಕೇಂದ್ರಗಳಲ್ಲಿ ಸ್ವಚ್ಛತೆಯ ಬಗ್ಗೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇದ್ದರೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ನೂತನ ತಾಲ್ಲೂಕಿನ ಅಭಿವೃದ್ಧಿಗೆ ಅಧಿಕಾರಿಗಳು ಪ್ರಾಂಜಲವಾದ ಮನಸ್ಸಿನಿಂದ ಹಾಗೂ ಕಾಯಾ, ವಾಚಾ ಕಾರ್ಯ ನಿರ್ವಹಿಸಬೇಕು. ಹಾಗೆಯೇ ಸರ್ಕಾರ ನೂತನ ತಾಲ್ಲೂಕಿನ ಅಭಿವೃದ್ಧಿಗೆ ಸಿದ್ದ ಪಡಿಸಿರುವ ಯೋಜನೆಗಳನ್ನು ಜಾರಿಗೆ ತರಲು ಕ್ರಮಗಳನ್ನು ಕೈಗೊಂಡು ಇದೊಂದು ಜಿಲ್ಲೆಯಲ್ಲಿಯೇ ಮಾದರಿಯ ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಸಂಗ್ವಾರ್ ಮಾತನಾಡಿ, ಎಲ್ಲಾ ಅನುಷ್ಠಾನ ಅಧಿಕಾರಿಗಳು ಶಹಾಪುರದಲ್ಲಿಯೇ ಇದ್ದರೆ ವಡಗೇರಾ ತಾಲ್ಲೂಕು ಕೇಂದ್ರ ಅಭಿವೃದ್ಧಿಯಾಗುವುದಿಲ್ಲ. ವಾರದಲ್ಲಿ ಮೂರು ದಿನ ವಡಗೇರಾಕ್ಕೆ ಬಂದು ಕಾಮಗಾರಿ ಹಾಗೂ ಯೋಜನೆಯ ಅನುಷ್ಠಾನ ಪರಿಶೀಲಿಸಬೇಕು ಎಂದು ಹೇಳಿದರು.
ಅನುಷ್ಠಾನ ಅಧಿಕಾರಿಗಳಿಗೆ ಕೆಲಸ ಕಾರ್ಯಗಳು ಮಾಡಲು ತೊಂದರೆಯಾಗುತಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕೊಠಡಿಯ ವ್ಯವಸ್ಥೆಯನ್ನು ಮಾಡಿ ಕೊಡಲಾಗುವುದು. ಶೀಘ್ರವೇ ಇದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿಬಾ ಜಲಿಯನ್, ಸಿಡಿಪಿಒ ಮೀನಾಕ್ಷಿ, ಎಇಇ ಸಿದ್ದಣ್ಣಗೌಡ ಹಾಗೂ ಎಲ್ಲಾ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಇದ್ದರು.