ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಮೊಹಮದ್ ನಲಪಾಡ್ ಹ್ಯಾರಿಸ್ ಜಾಮೀನು ಕೋರಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ನಗರದ 62ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಈ ಮೇಲ್ಮನವಿ ಸಲ್ಲಿಸಲಾಗಿದೆ. ಇದೇ 4 ಅಥವಾ 5ರಂದು ಅರ್ಜಿ ವಿಚಾರಣೆಗೆ ಬರುವ ನಿರೀಕ್ಷೆ ಇದೆ.
‘ಈಗಾಗಲೇ ಪೊಲೀಸರು ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದಾರೆ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಆದ್ದರಿಂದ ನಲಪಾಡ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವ ಅಗತ್ಯವಿಲ್ಲ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
‘ಆರೋಪಿ ಶಾಸಕರ ಪುತ್ರ ಎಂಬ ಕಾರಣಕ್ಕೆ ಈ ಪ್ರಕರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದೆ. ಆದ್ದರಿಂದ ನಲಪಾಡ್ಗೂ ಜಾಮೀನು ನೀಡಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ಯು.ಬಿ ಸಿಟಿಯ ಫರ್ಜಿ ಕೆಫೆಯಲ್ಲಿ ನಲಪಾಡ್ ಹಾಗೂ ಅವರ ಏಳು ಸಹಚರರು 2018ರ ಫೆಬ್ರುವರಿ 17ರಂದು ವಿದ್ವತ್ ಮೇಲೆ ಜಗ್, ಬಾಟಲಿ ಹಾಗೂ ಕಬ್ಬಿಣದ ರಿಂಗ್ಗಳಿಂದ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಫೆಬ್ರುವರಿ 19ರಂದು ನಲಪಾಡ್ ಅವರನ್ನು ಪೊಲೀಸರು ಬಂಧಿಸಿದ್ದರು.