ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗೇರಾ: ಹಂಚನಾಳ ಗ್ರಾಮಕ್ಕಿಲ್ಲ ಮೂಲಸೌಲಭ್ಯ

ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ವಾಟ್ಕರ್ ನಾಮದೇವ
Published 27 ಮಾರ್ಚ್ 2024, 5:28 IST
Last Updated 27 ಮಾರ್ಚ್ 2024, 5:28 IST
ಅಕ್ಷರ ಗಾತ್ರ

ವಡಗೇರಾ: ತಾಲ್ಲೂಕಿನ ಐಕೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಹಂಚನಾಳ ಗ್ರಾಮ ಮೂಲಸೌಲಭ್ಯಗಳಿಂದ ವಂಚಿತವಾಗಿದೆ.

ಗ್ರಾಮದಲ್ಲಿ ಸುಮಾರು 2,500 ಜನಸಂಖ್ಯೆ ಹೊಂದಿದ್ದು, 1,100ಕ್ಕಿಂತ ಅಧಿಕ ಮತದಾರರು ಇದ್ದಾರೆ.  ಹಂಚನಾಳ ಗ್ರಾಮದಿಂದ 4 ಜನ ಗ್ರಾಮ ಪಂಚಾಯಿತಿಯ ಸದಸ್ಯರು ಇದ್ದಾರೆ. ಆದರೆ, ಇಲ್ಲಿಯವರೆಗೂ ಗ್ರಾಮಸ್ಥರಿಗೆ ಯಾವುದೇ ರೀತಿಯ ಮೂಲ ಸೌಕರ್ಯಗಳಾದ ಒಳಚರಂಡಿ, ರಸ್ತೆ, ಕುಡಿಯುವ ನೀರು ಒದಗಿಸಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಒಳ ಚರಂಡಿಗಳಿಲ್ಲ:

ಹಂಚನಾಳ ಗ್ರಾಮದ ಯಾವುದೇ ಬಡಾವಣೆಯಲ್ಲಿ ಅಲೆದಾಡಿದರೆ ಕಣ್ಣಿಗೆ ಒಳಚರಂಡಿಗಳು ಗೋಚರಿಸುವುದಿಲ್ಲ.

ಗ್ರಾಮದಲ್ಲಿ ಒಳಚರಂಡಿಯ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ಮನೆಯ ಬಚ್ಚಲು ನೀರು ರಸ್ತೆಯ ಮೇಲೆ ಹರಿದಾಡುತ್ತಿದೆ. ಇದರಿಂದಾಗಿ ಬಡಾವಣೆಯ ನಿವಾಸಿಗಳು ನಡೆದಾಡಲು ಕಿರಿಯರು ಹಾಗೂ ಹಿರಿಯರು ತೊಂದರೆ ಅನುಭವಿಸುತಿದ್ದಾರೆ.

ಚರಂಡಿ ನೀರು ರಸ್ತೆಯ ಮೇಲೆ ನಿಲ್ಲುವುದರಿಂದ ಸೊಳ್ಳೆಗಳ ತಾಣವಾಗಿ ಮಾರ್ಪಾಟ್ಟಿದೆ. ಇದರಿಂದ ಮಲೇರಿಯಾ, ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಗ್ರಾಮಸ್ಥರು ಭಯ ಭೀತರಾಗಿದ್ದಾರೆ.

ಹದಗೆಟ್ಟ ಸಿಸಿ ರಸ್ತೆಗಳು:

ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದ್ದರೂ ಸಂಪೂರ್ಣ ಹದಗೆಟ್ಟಿದೆ. ಜೆಜೆಎಂ ಕಾಮಗಾರಿ ನಡೆಯುವ ಸಮಯದಲ್ಲಿ ಸಿಸಿ ರಸ್ತೆಯ ನಡುವೆ ರಸ್ತೆಯನ್ನು ಅಗೆದು ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಮುಗಿದ ನಂತರ ಸಿಸಿ ರಸ್ತೆ ನಿರ್ಮಾಣ ಮಾಡಬೇಕಾಗಿತ್ತು. ಆದರೆ, ಜೆಜೆಎಂ ಕಾಮಗಾರಿ ಪಡೆದ ಗುತ್ತಿಗೆದಾರರು ಅದನ್ನು ಹಾಗೆಯೆ ಬಿಟ್ಟಿರುವುದರಿಂದ ಗ್ರಾಮಸ್ಥರಿಗೆ ಹಾಗೂ ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗಿದೆ.

ರಸ್ತೆ ಬದಿಯಲ್ಲಿ ಬೆಳೆದ ಜಾಲಿ ಗಿಡಗಳು:

ಗ್ರಾಮದ ಒಳಗಡೆ ಪ್ರವೇಶ ಮಾಡಬೇಕಾದರೆ ರಸ್ತೆಯ ಎರಡು ಬದಿಗಳಲ್ಲಿ ಜಾಲಿಗಿಡಗಳು ಬೆಳೆದಿವೆ. ನಡೆಯುವಾಗ ಅಜಾಗರೂಕತೆ ತೋರಿದರೆ ಈ ಗಿಡಗಳ ಮುಳ್ಳುಗಳು ಮೈಯೆಲ್ಲಾ ಪರಚಿ ಗಾಯ ಮಾಡುತ್ತವೆ.

ಗ್ರಾಮಗಳಲ್ಲಿನ ಮೂಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಗ್ರಾಮದ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಹಂಚನಾಳ ಗ್ರಾಮಕ್ಕೆ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಬಡಾವಣೆಯ ನಿವಾಸಿಗಳು ಆಗ್ರಹಿಸಿದ್ದಾರೆ.

ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಗಿಡಗಳು ಬೆಳೆದಿರುವುದು
ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಗಿಡಗಳು ಬೆಳೆದಿರುವುದು

ನಾನು ಈಚೆಗೆ ಅಧಿಕಾರ ಸ್ವೀಕರಿಸಿದ್ದೇನೆ. ಇನ್ನೂ ಹದಿನೈದು ದಿನಗಳಲ್ಲಿ ಗ್ರಾಮದಲ್ಲಿ ಒಳಚರಂಡಿಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು

-ದೇವಿಂದ್ರಪ್ಪ ಪಿಡಿಒ ಐಕೂರು

ಗ್ರಾಮದಲ್ಲಿ ಮೂಲಸೌರ್ಯಗಳನ್ನು ಒದಗಿಸದಿದ್ದರೆ ಮುಂಬರುವ ದಿನಗಳಲ್ಲಿ ಬರುವ ಲೋಕಸಭಾ ಚುನಾವಣೆ ಬಹಿಷ್ಕರಿಸಲಾಗುವುದು

-ಖಂಡಪ್ಪ ಹಂಚನಾಳ ಗ್ರಾಮಸ್ಥ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT