ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಗುರುವಾರ ಆರೋಗ್ಯ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಆದರೆ, ಸಂಜೆ ಬಾವುಟ ಇಳಿಸದೆ, ಶುಕ್ರವಾರ ಬೆಳಿಗ್ಗೆ ಬಾವುಟ ಇಳಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಈ ಕುರಿತು ಗ್ರಾಮದ ಯುವಕರಾದ ದೇವು, ಶೀನು, ವಿಶಾಲ, ವೆಂಕಟೇಶ್, ಕೇಂದ್ರದ ಸಿಬ್ಬಂದಿ ಮಳೆ ಬಂದರೂ ಬಾವುಟ ಇಳಿಸದೆ ನಿರ್ಲಕ್ಷ್ಯ ವಹಿಸಿದ್ದು, ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ್ದಾರೆ ಎಂದು ದೂರಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ರಾಗಪ್ರಿಯಾ ಆರ್., ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಮಾಹಿತಿ ಕೇಳಿದ್ದೇನೆ. ವರದಿ ನೀಡಿದ ನಂತರ ತಪ್ಪಿತಸ್ತರೆಂದು ಕಂಡು ಬಂದರೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪ್ರಭಾರಿ ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನವಾರ ಪ್ರತಿಕ್ರಿಯಿಸಿ ‘ಸಂಬಂಧಿಸಿದವರಿಗೆ ನೋಟಿಸ್ ನೀಡಲಾಗುವುದು. ಅವರು ಉತ್ತರ ಕೊಟ್ಟ ಮೇಲೆ ತಪ್ಪಿತಸ್ತರೆಂದು ಸಾಬೀತಾದರೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.