ನವದೆಹಲಿ: ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಕುಲಪತಿ ತಾರಿಕ್ ಮನ್ಸೂರ್ ಬುಧವಾರ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ವಿಶ್ವವಿದ್ಯಾಲಯದ ಆವರಣದಲ್ಲಿ ಹಾಕಿದ್ದ ಮಹಮದ್ ಅಲಿ ಜಿನ್ನಾ ಅವರ ಭಾವಚಿತ್ರದ ವಿವಾದ, ಶೈಕ್ಷಣಿಕ ವಾತಾವರಣಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಿದರು.
ವಿಶ್ವವಿದ್ಯಾಲಯದ ವಾತಾವರಣವನ್ನು ಸಹಜ ಸ್ಥಿತಿಗೆ ತರಲು ಅಗತ್ಯವಿರುವ ನೆರವನ್ನು ಸರ್ಕಾರ ನೀಡಲಿದೆ ಎಂದು ಮನ್ಸೂರ್ ಅವರಿಗೆ ರಾಜನಾಥ್ ಸಿಂಗ್ ಭರವಸೆ ನೀಡಿದರು.
ಗೃಹ ಸಚಿವರ ಭೇಟಿಗೂ, ಈಗಿನ ವಿವಾದಕ್ಕೂ ಸಂಬಂಧವಿಲ್ಲ. ಬಹಳ ಹಿಂದೆಯೇ ಸಚಿವರ ಭೇಟಿಗೆ ಸಮಯ ನಿಗದಿಯಾಗಿತ್ತು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕೇಂದ್ರ ಸೇವೆಗೆ ನೇಮಿಸುವ ಸಂಬಂಧ ಅಧಿಕಾರಿಗಳನ್ನು ಕಳುಹಿಸುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಮನ್ಸೂರ್ ತಿಳಿಸಿದರು.