ಯಾದಗಿರಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಷ್ಟ್ರವ್ಯಾಪಿ ರೈಲ್ವೆ ಮುತ್ತಿಗೆ ಅಂಗವಾಗಿ ನಗರದ ಶಾಸ್ತ್ರಿ ವೃತ್ತದಿಂದ ರೈಲ್ವೆ ನಿಲ್ದಾಣ ಆವರಣದವರೆಗೆ ಸಂಯುಕ್ತ ಹೋರಾಟ ಕರ್ನಾಟಕ ಸಂಘದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ಮೂರು ಕೃಷಿ ಸಂಬಂಧಿತ ಕಾನೂನುಗಳನ್ನು ರದ್ದು ಮಾಡಬೇಕು. ವಿದ್ಯುತ್ ಮಸೂದೆ-2020 ನ್ನು ವಾಪಸ್ ಪಡೆಯಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಮಾಡುವ ಕಾನೂನನ್ನು ರಚಿಸಬೇಕೆಂದು ಆಗ್ರಹಿಸಿದರು.
ಆರ್ಕೆಎಸ್ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ರಾಮಲಿಂಗಪ್ಪ ಮಾತನಾಡಿ, ಕೇಂದ್ರ ಸರ್ಕಾರ ರೈತರ ಪರವಾಗಿದೆ ಎಂದು ಹೇಳುತ್ತಿದ್ದರೂ ಕಾಯ್ದೆಗಳನ್ನು ರೂಪಿಸಬೇಕಾದರೆ ರೈತರನ್ನು ಕಡೆಗಣಿಸಿದೆ ಎಂದು ಆರೋಪಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾರ್ಪೊರೇಟ್ ಪರವಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ವಿದ್ಯುತ್ ಕಾಯ್ದೆ ಹಾಗೂ ಗುತ್ತಿಗೆ ಕೃಷಿ ಕಾಯ್ದೆ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತು ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿ ಪಡಿಸುವಂತೆ ಮತ್ತು ಕೃಷಿ ಸಂಬಂಧಿ ಸಲಕರಣೆಗಳನ್ನು ಸರ್ಕಾರವೇ ಸಬ್ಸಿಡಿ ಮೂಲಕ ರೈತರಿಗೆ ವಿತರಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಉಪಾಧ್ಯಕ್ಷ ಚನ್ನಪ್ಪ ಆನೇಗುಂದಿ, ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಡಿ. ಉಮಾದೇವಿ ಮಾತ ನಾಡಿ, ಕೇಂದ್ರ ಸರ್ಕಾರ ಇಡೀ ಕೃಷಿ ಭೂಮಿಯನ್ನು ಉದ್ಯಮಿಗಳ ಮಡಿಲಿಗೆ ಹಾಕಿದೆ ಎಂದು ಆರೋಪಿಸಿದರು.
ಹೋರಾಟಗಾರರು ವಶಕ್ಕೆ: ಹೋರಾಟಗಾರರು ರೈಲ್ವೆ ಕಚೇರಿಗೆ ನುಗ್ಗುವುದನ್ನು ತಡೆದ ಪೊಲೀಸರು ಕೆಲ ಕಾಲ ವಶಕ್ಕೆ ಪಡೆದ ನಂತರ ಬಿಡುಗಡೆ ಮಾಡಿದರು.
ಕೆಪಿಆರ್ಎಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಂ.ಸಾಗರ್, ಕೃಷಿ ಕೂಲಿಕಾರ ಸಂಘದ ಜಿಲ್ಲಾಧ್ಯಕ್ಷ ದಾವಲಸಾಬ್ ನದಾಫ್, ಜಮಾಲ್ ಸಾಬ್, ಖಾಜಾಮೈನುದ್ದೀನ್, ಮಲ್ಲಮ್ಮ, ಸಿದ್ದಣ್ಣ, ದೇವಿಂದ್ರ, ರೈತರು ಭಾಗವಹಿಸಿದ್ದರು.