ಯಾದಗಿರಿ: ಶುಕ್ರವಾರ ನಡೆಯುವ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯಕ್ಕೆ ಸುಮಾರು 10 ರಿಂದ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಹೇಳಿದರು.
ಗುರುಮಠಕಲ್ ತಾಲ್ಲೂಕಿನ ಚಂಡರಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು 2006 ರಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಅದು ಜನರಿಗೆ ಹತ್ತಿರವಾಗಿ ನೇರವಾಗಿ ಜನರೊಟ್ಟಿಗೆ ಸೇರುವ ಕಾರ್ಯಕ್ರಮ ಆಗಿತ್ತು. ಅದರಂತೆ ಈಗ ಯಾದಗಿರಿ ಜಿಲ್ಲೆಯಿಂದ ಗ್ರಾಮ ವಾಸ್ತವ್ಯ ಆರಂಭಿಸುತ್ತಿದ್ದಾರೆ. ಇದು ಒಳ್ಳೆಯ ಕಾರ್ಯಕ್ರಮ ಎಂದರು.
ಹಿಂದುಳಿದ ಜಿಲ್ಲೆಗೆ ಮುಖ್ಯಮಂತ್ರಿಗಳೇ ಬಂದು ಜನರ ಅಹವಾಲು ಆಲಿಸುವುದು ಸಾಮಾನ್ಯ ವಿಷಯವಲ್ಲ. ಯಾವುದೇ ಆಡಂಬರಕ್ಕೆ ಒತ್ತು ಕೊಡದೆ ಸರಳವಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ ಎಂದರು.
ಕೆಪಿಸಿಸಿ ವಿಸರ್ಜನೆ ಸ್ವಾಗತಾರ್ಹ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೆಪಿಸಿಸಿ ಘಟಕವನ್ನು ವಿಸರ್ಜಿಸಿದ್ದು ಸ್ವಾಗತಾರ್ಹ ಎಂದರು.
ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಯೋಗ ದಿನಾಚರಣೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜೆಡಿಎಸ್ ಫ್ಲೆಕ್ಸ್ ,ಬಾವುಟ ಬ್ಯಾನರ್ ಅಳವಡಿಸಲಾಗಿದೆ. ಆದರೆ, ಕಾಂಗ್ರೆಸ್ ಬಾವುಟ ಒಂದು ಕಾಣದಿರುವ ಬಗ್ಗೆ ಪ್ರಶ್ನಿಸಿದಾಗ, ಇಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಹೀಗಾಗಿ ಇಲ್ಲಿನ ಕಾರ್ಯಕರ್ತರು ಫ್ಲೆಕ್ಸ್ ಅಳವಡಿಸಿದ್ದಾರೆ ಎಂದರು.
ಇದಕ್ಕೂ ಮುನ್ನ ಗ್ರಾಮ ವಾಸ್ತವ್ಯದ ಬಗ್ಗೆ ಸಚಿವರು ಸಿದ್ಧತೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.