ಯಾದಗಿರಿ: ರಾಜ್ಯ ಸರ್ಕಾರದ ಆದೇಶದಂತೆ ಮಾಸ್ಕ್ ದಿನಾಚರಣೆ ಅಂಗವಾಗಿ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಕುರಿತು ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ನ್ಯಾಯಾಧೀಶರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಗರದ ವಿವಿಧ ವಾರ್ಡ್ಗಳಲ್ಲಿ ಗುರುವಾರ ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಜಾಥಾ ನಡೆಸಲಾಯಿತು.
ವಾರ್ಡ್ ನಂ. 25: ನಗರದ ವಾರ್ಡ್ ನಂ.25ರಲ್ಲಿ ನಡೆದ ಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಶ್ರೀಧರ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ನ್ಯಾಯಾಧೀಶರು, ಕೊರೊನಾ ವೈರಸ್ ವಿರುದ್ಧ ಇಡೀ ದೇಶ ಹೋರಾಟ ನಡೆಸುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಇದ್ದರು.
ವಾರ್ಡ್ ನಂ. 23: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರ ನೇತೃತ್ವದಲ್ಲಿ ನಗರದ ವಾರ್ಡ್ ನಂ.23ರಲ್ಲಿ ಜಾಗೃತಿ ಜಾಥಾ ನಡೆಯಿತು. ನಗರದ ವೀರಶೈವ ಕಲ್ಯಾಣ ಮಂಟಪದಿಂದ ಆರಂಭವಾದ ಜಾಥಾವು ಗಾಂಧಿವೃತ್ತಕ್ಕೆ ಬಂದು ತಲುಪಿತು.
ಗಾಂಧೀಜಿ ಮೂರ್ತಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕೋವಿಡ್-19 ಸೋಂಕು ನಿಯಂತ್ರಿಸಲು ಪ್ರತಿಯೊಬ್ಬರೂ ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ವಾರ್ಡ್ ನಂ. 15: ನಗರದ ವಾರ್ಡ್ ನಂ.15ರಲ್ಲಿ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಚಾಲನೆ ನೀಡಿದರು.
ವಾರ್ಡ್ ನಂ. 26: ನಗರದ ವಾರ್ಡ್ ನಂ.26ರಲ್ಲಿ ನಡೆದ ಜಾಗೃತಿ ಜಾಥಾಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಚಾಲನೆ ನೀಡಿದರು.
ವಾರ್ಡ್ ನಂ. 1: ನಗರದ ವಾರ್ಡ್ ನಂ.1ರಲ್ಲಿ ನಡೆದ ಜಾಗೃತಿ ಜಾಥಾಕ್ಕೆ ಉಪ ವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ ಚಾಲನೆ ನೀಡಿದರು.
ಈ ವೇಳೆ ಆಯಾ ವಾರ್ಡ್ಗಳ ನಗರಸಭೆ ಸದಸ್ಯರು, ಪೌರಾಯುಕ್ತ ಬಕ್ಕಪ್ಪ ಎಚ್., ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಸಭೆ ಪರಿಸರ ಎಂಜಿನಿಯರ್ ಸಂಗಮೇಶ, ಸಂಘ-ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಹಾಗೂ ನಗರಸಭೆ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.