ಹುಣಸಗಿ: ಸುರಪುರ ಮತಕ್ಷೇತ್ರಲ್ಲಿ ಪ್ರತಿಯೊಂದು ಕಚೇರಿಗಳಿಗೆ ಆಗಮಿಸುವ ರೈತರನ್ನು ಅಧಿಕಾರಿಗಳು ಗೌರವಯುತವಾಗಿ ಕಾಣಬೇಕು. ಹಾಗೂ ನಿಗದಿತ ಸಮಯದಲ್ಲಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಶಾಸಕ ರಾಜೂಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುರಪುರ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಮ್ಮಿಕೊಂಡಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭತ್ತ ಬೆಳೆ ಹಾಗೂ ಏಕ ಬೆಳೆ ಪದ್ಧತಿಯಿಂದಾಗಿ ರೈತರು ಪ್ರತಿ ಬಾರಿಯೂ ಸಾಕಷ್ಟು ನಷ್ಟ ಅನುಭವಿಸು ತ್ತಿದ್ದಾರೆ. ಆದ್ದರಿಂದ ರೈತರಿಗೆ ಬೆಳೆ ಪದ್ಧತಿಯನ್ನು ಬದಲಾಯಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು ಮುಂದಾಗುವಂತೆ ಸಲಹೆ ನೀಡಿದರು.
ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಪಲಾನುಭವಿಗಳಿಗೆ ಪ್ರೋತ್ಸಾಹಧನ ನೀಡಬೇಕು. ಬೆಳೆ ವಿಮೆ ಬಗ್ಗೆ ರೈತರಿಗೆ ಸರಿಯಾದ ಜಾಗೃತಿ ಮೂಡಿಸಬೇಕು. ಅರಣ್ಯ ಇಲಾಖೆ ವತಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಬೇಕು ಎಂದು ಸೂಚಿಸಿದರು.
ಸುರಪುರ ಮತಕ್ಷೇತ್ರದಲ್ಲಿ ಅಕ್ಷರ ದಾಸೋಹ ಯೋಜನೆಯಲ್ಲಿ ವಿದ್ಯಾರ್ಥಿ ಗಳಿಗೆ ನೀಡುತ್ತಿರುವ ಬಿಸಿಯೂಟವನ್ನು ಅಧಿಕಾರಿಗಳು ಶಾಲೆಗಳಿಗೆ ಹೋಗಿ ಊಟದ ಗುಣಮಟ್ಟವನ್ನು ಪರಿಶೀಲಿಸಬೇಕು. ಒಂದು ವೇಳೆ ಕಳಪೆ ಆಹಾರ ನೀಡುತ್ತಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಲೋಕೋಪಯೋಗಿ ಇಲಾಖೆಯ ಎಇಇ ಎಸ್.ಡಿ.ಪಾಟೀಲ ಮಾತನಾಡಿ, ನಮ್ಮ ಇಲಾಖೆಯ ಅಡಿಯಲ್ಲಿ ಒಟ್ಟು 78 ಕಾಮಗಾರಿಕೈಗೊಳ್ಳಲಾಗಿದ್ದು, 17 ಕಾಮಗಾರಿಗಳು ಪೂರ್ಣಗೊಂಡಿದ್ದು, 26 ಪ್ರಗತಿಯಲ್ಲಿದ್ದು, 11 ಕೆಲಸಗಳು ಆರಂಭಿಸಬೇಕಿದೆ. 25 ಕಾಮಗಾರಿಗಳು ಟೆಂಡರ್ ಹಂತದಲ್ಲಿದೆ ಎಂದು ಸಭೆಯಲ್ಲಿ ತಿಳಿಸಿದರು.
ಅದರಂತೆ ಹುಣಸಗಿ ಪಟ್ಟಣದ ಹೊರಹೊಲದಲ್ಲಿ ಅಂದಾಜು ₹4 ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರವನ್ನು ನಿರ್ಮಿಸಲು ಟೆಂಡರ್ ಕರೆಯಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಿದರು.
ಹುಣಸಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸಲು ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯ ಹುಣಸಗಿ ಸಮುದಾಯ ಆರೋಗ್ಯ ಕೇಂದ್ರ 30 ಹಾಸಿಗೆಯ ಆಸ್ಪತ್ರೆಯಾಗಿದೆ. ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿದರೆ 100 ಹಾಸಿಗೆ ಆಸ್ಪತ್ರೆಯಾಗಿ ಹುಣಸಗಿ ಹಾಗೂ ಸುತ್ತಮುತ್ತಲಿನ ಜನರಿಗೆ ಅನುಕೂಲವಾಗಲಿದೆ. ಹಾಗೂ ಕಕ್ಕೇರಾ ಪಟ್ಟಣದ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರ ಮಾಡಲು ಕೂಡಾ ಪ್ರಸ್ತಾವನೆ ಕಳಿಸಿಕೊಡಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ತಿಳಿಸಿದರು.
ತಹಶೀಲ್ದಾರ್ ಅಶೋಕಕುಮಾರ ಸುರಪೂರಕರ್, ಹುಣಸಗಿ ತಾ.ಪಂ ಅಧಿಕಾರಿ ಬಸವರಾಜಯ್ಯ ಹಿರೇಮಠ, ಸುರಪುರ ತಾ.ಪಂ ಅಧಿಕಾರಿ ರವಿಚಂದ್ರರೆಡ್ಡಿ ಲಕ್ಕೂಡಿ, ಜಂಟಿ ಕೃಷಿ ನಿರ್ದೇಶಕ ಎಸ್.ಹಬೀದ್ ಹಾಗೂ ಆಡಳಿತ ಅಧಿಕಾರಿ, ಸಿಪಿಐ ಎನ್.ಕೆ ದೌಲತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.