ಯಾದಗಿರಿ: ನಗರದಲ್ಲಿ ಸೋಮವಾರ ಸುರಿದ ಸುರಿದ ಅಕಾಲಿಕ ಮಳೆಯಿಂದ ಹಾನಿ ಸಂಭವಿಸಿದ ನಗರಸಭೆ ಸಭಾಂಗಣ ಹಾಗೂ ಎಪಿಎಂಸಿ ಮಾರುಕಟ್ಟೆಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಭೇಟಿ ನೀಡಿ ಪರಿಶೀಲಿಸಿದರು.
ನಗರಸಭೆ ಸಭಾಂಗಣ ಛಾವಣಿ ಬಿದ್ದಿರುವುದನ್ನು ವೀಕ್ಷಿಸಿದರು. ನಗರಸಭೆ ಪೌರಾಯುಕ್ತ ಭೀಮಣ್ಣ ಟಿ.ನಾಯಕ ಅವರಿಂದ ಮಾಹಿತಿ ಪಡೆದ ಶಾಸಕರು, ಶೀಘ್ರವೇ ದುರಸ್ತಿ ಮಾಡಬೇಕು ಎಂದು ಸೂಚಿಸಿ, ಹೆಚ್ಚಿನ ಅನುದಾನಕ್ಕೆ ಜಿಲ್ಲಾಧಿಕಾರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಂತರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿದ ಶಾಸಕರು, ಮಳೆಯಿಂದ ಹಾನಿಗೊಳಗಾದ ಶೇಂಗಾ ವೀಕ್ಷಿಸಿದರು. ಎಪಿಎಂಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮಳೆಯಿಂದ ಶೇಂಗಾ ನಷ್ಟ ಎಷ್ಟಾಗಿದೆ ಎನ್ನುವುದರ ಸಮಗ್ರ ಮಾಹಿತಿ ಸಂಗ್ರಹಿಸಿ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಎಪಿಎಂಸಿ ಸಹಾಯಕ ಅಧಿಕಾರಿ ಭೀಮರಾಯ ಕಲ್ಲೂರ, ಕಾರ್ಯದರ್ಶಿ ಸುಮಂಗಲಾ ಹೂಗಾರ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ಅಂಬಯ್ಯ ಶಾಬಾದಿ, ಮುಖಂಡ ಮಾರುತಿ ಕಲಾಲ್ ಸೇರಿದಂತೆ ಮುಖಂಡರು ಇದ್ದರು.
****
ರೈತರಿಗೆ ಪರಿಹಾರ ಭರವಸೆ
ಯಾದಗಿರಿ: ನಗರದಲ್ಲಿ ಸೋಮವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಇಲ್ಲಿಯ ಕೃಷಿ ಮಾರುಕಟ್ಟೆಯಲ್ಲಿ ಶೇಂಗಾ ಹಾಳಾಗಿತ್ತು. ಆದ್ದರಿಂದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು,‘ಎಪಿಎಂಸಿ ಆವರಣದಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿದ್ದ 50 ರಿಂದ 60 ಕ್ವಿಂಟಲ್ ಶೇಂಗಾ ಹಾನಿಯಾಗಿದೆ. ಸರ್ಕಾರಕ್ಕೆ ಪತ್ರ ಬರೆದು ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ಒದಗಿಸಲಾಗುವುದು’ ಎಂದು ಹೇಳಿದರು.
ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾಯ ಕಲ್ಲೂರು, ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಮಂಗಲಾ ದೇವಿ, ವರ್ತಕರ ಸಂಘದ ಅಧ್ಯಕ್ಷರು ಹಾಗೂ ಬೆಳೆ ನಷ್ಟಕ್ಕೆ ಒಳಗಾದ ರೈತರು ಇದ್ದರು.