ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ನಿವೇಶನ: ಅರ್ಜಿ ಪರಿಶೀಲಿಸಿ

ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಸೂಚನೆ
Last Updated 13 ಫೆಬ್ರುವರಿ 2021, 0:51 IST
ಅಕ್ಷರ ಗಾತ್ರ

ಯಾದಗಿರಿ: ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಪರಿಶೀಲಿಸಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಹಂಚಿಕೆಯಾಗಿರುವ ಘಟಕಗಳಿಗೆ ಕೈಗಾರಿಕೆ ಸ್ಥಾಪಿಸುವ ಕುರಿತು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆಐಎಡಿಬಿ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ವಿದ್ಯುತ್ ಸಂಪರ್ಕ ಕಲ್ಪಿಸಲು ಕೈಗೆತ್ತಿಕೊಳ್ಳಲಾಗಿರುವ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಕಡೇಚೂರು ಹಾಗೂ ಮುಂಡರಗಿ ಸೇರಿದಂತೆ ವಿವಿಧ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಉದ್ದಿಮೆ ಸ್ಥಾಪನೆಗೆ ನಿವೇಶನ ಪಡೆದಿದ್ದು, ಕೆಲ ಕೈಗಾರಿಕೋದ್ಯಮಿಗಳು ಉದ್ದಿಮೆ ಸ್ಥಾಪನೆ ಮಾಡದಿರುವುದರಿಂದ ಹಂಚಿಕೆ ಮಾಡಲಾದ ನಿವೇಶನವನ್ನು ನಿಯಮಾನುಸಾರ ರದ್ದತಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ನಿವೇಶನ ಪಡೆದ ಕೈಗಾರಿಕೋದ್ಯಮಿಗಳು ಘಟಕ ಸ್ಥಾಪಿಸಿ ಉದ್ಯೋಗ ನೀಡುವಂತಾಗಬೇಕು. ಆದರೆ, ಕೆಲವು ನಿವೇಶನಗಳು ಇಲ್ಲಿ ಖಾಲಿ ಉಳಿದಿದ್ದು, ನಮ್ಮ ಗಮನಕ್ಕೆ ಬಂದಿದೆ. ಇದು ಬೇಸರದ ಸಂಗತಿಯಾಗಿದ್ದು, ಇಂಥ ನಿವೇಶನಗಳನ್ನು ರದ್ದುಗೊಳಿಸಿ ಅರ್ಹರಿಗೆ ಮರು ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದಿನ ದಿನಮಾನದಲ್ಲಿ ಕೈಗಾರಿಕೆ ನಡೆಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಹೀಗಾಗಿ ಕೈಗಾರಿಕೆ ಸ್ಥಾಪಿಸಿ ನಿರುದ್ಯೋಗಿಗಳಿಗೆ ಕೆಲಸ ನೀಡಲು ಮುಂದೆ ಬರುವ ಉದ್ಯಮಿಗಳಿಗೆ ಅನಗತ್ಯ ತೊಂದರೆ ನೀಡದೆ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಅಗತ್ಯವಿದೆ. ಹೀಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಉದ್ಯಮಿದಾರರಿಗೆ ಸೂಕ್ತ ಸಹಕಾರ ನೀಡಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಮಾಣಿಕ ವಿ ರಘೋಜಿ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಪರಿಸರ ಮಾಲಿನ್ಯ ಇಲಾಖೆಯ ಪ್ರಾದೇಶಿಕ ಅಧಿಕಾರಿ ವೆಂಕಟೇಶ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಅಧಿಕಾರಿ ಪ್ರಕಾಶ, ಕೈಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಮ್ಯಾಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT