ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಒತ್ತಡ ನಿರ್ವಹಣೆಗೆ ಕ್ರೀಡೆಗಳಲ್ಲಿ ಭಾಗವಹಿಸಿ’

ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಚಾಲನೆ
Last Updated 4 ಜನವರಿ 2020, 16:16 IST
ಅಕ್ಷರ ಗಾತ್ರ

ಯಾದಗಿರಿ: ‘ಸರ್ಕಾರಿನೌಕರರು ದಿನನಿತ್ಯದ ಕೆಲಸ ಕಾರ್ಯ ನಿರ್ವಹಣೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿರುತ್ತಾರೆ. ಪ್ರತಿಯೊಬ್ಬರಿಗೂ ದೈಹಿಕಮತ್ತು ಮಾನಸಿಕ ಸದೃಢತೆ ಮುಖ್ಯ. ಈ ನಿಟ್ಟಿನಲ್ಲಿ ನೌಕರರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿರ್ವಹಣೆಗೆ ಸಹಕಾರಿಯಾಗುತ್ತದೆ’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸಂಕುಚಿತ ಮನೋಭಾವ ಮೂಡುವುದು ಸಹಜ. ಕ್ರೀಡೆಗಳಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನು ಹೊರ ಹಾಕಲು ಸಾಧ್ಯವಾಗುತ್ತದೆ. ಕ್ರೀಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹಬ್ಬ, ಉತ್ಸವ, ಜಾತ್ರೆಯಂತೆ ಆಚರಣೆ ಮಾಡಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

ಡಿವೈಎಸ್‍ಪಿ ಯು.ಶರಣಪ್ಪ ಮಾತನಾಡಿ, ‘ಮನುಷ್ಯ ದೈಹಿಕವಾಗಿ ಸದೃಢವಾಗಿದ್ದರೆ ಮಾನಸಿಕವಾಗಿ ಸದೃಢವಾಗಿರಲು ಸಾಧ್ಯ. ದಿನನಿತ್ಯದ ಕೆಲಸ ಕಾರ್ಯಗಳನ್ನು ಲವಲವಿಕೆಯಿಂದ ಮಾಡಲು ಕ್ರೀಡೆಗಳು ಸಹಕಾರಿಯಾಗಲಿವೆ. ಪ್ರತಿಯೊಬ್ಬರು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರಡ್ಡಿ ಮಾಲಿಪಾಟೀಲ ಮಾತನಾಡಿ, ‘ಹಿಂದೆ ಯೋಗ ಮಾಡುವುದರಿಂದ ಮನುಷ್ಯರು ನೂರು ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ, ಇಂದಿನ ಒತ್ತಡದ ಜೀವನಕ್ಕೆ ಸಿಲುಕಿ ಕ್ರೀಡೆಗಳಿಂದ ವಿಮುಖರಾಗುತ್ತಿದ್ದೇವೆ. ಆಯುಷ್ಯ ವೃದ್ಧಿಗೆ ಯೋಗ ಮತ್ತು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ. ಆಟಗಳಲ್ಲಿ ಸಕ್ರಿಯರಾಗಿದ್ದರೆ ಸರ್ಕಾರಿಕಾರ್ಯಗಳ ಸರಳ ನಿರ್ವಹಣೆಗೆ ಸಹಕಾರಿಯಾಗಲಿದೆ’ ಎಂದು ತಿಳಿಸಿದರು.

ಜಿಲ್ಲೆಯಿಂದ 100, 200 ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ ಗುರುಮಠಕಲ್‍ನ ಸಿಪಿಎಸ್ ಶಾಲೆಯ ಸಹಶಿಕ್ಷಕ ನಾಗೇಶ್ ಅವರನ್ನು ಈವೇಳೆಸನ್ಮಾನಿಸಲಾಯಿತು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸ್ಸಪ್ಪ ಕುಳಗೇರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ಪರಮರಡ್ಡಿ ಕಂದಕೂರ, ಕಾರ್ಯಾಧ್ಯಕ್ಷ ಆರ್.ಎಂ.ನಾಟೇಕಾರ, ರಾಜ್ಯ ಪರಿಷತ್ ಸದಸ್ಯರಾದ ಸಂತೋಷ ನೀರಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ರಾಚಣ್ಣಗೌಡ, ಬಸವರಾಜ ಕೆರೂಟಗಿ, ಸಂತೋಷಸಿಂಗ್ ಚವ್ಹಾಣ, ಬಿ.ಸಾಬರಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಹಣಮಂತ ಹೊಸಮನಿ ಇದ್ದರು.

ಬೆನಕನಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಚಂದ್ರಕಲಾ ಪ್ರಾರ್ಥನಾ ಗೀತೆ ಹಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕೋಶಾಧ್ಯಕ್ಷ ಯಾಮರಡ್ಡಿ ಸ್ವಾಗತಿಸಿದರು. ಹೊನಗೇರಾಸರ್ಕಾರಿಪ್ರೌಢ ಶಾಲೆಯ ಶಿಕ್ಷಕ ಮಲ್ಲಿಕಾರ್ಜುನ ಕವಲಿ ನಿರೂಪಿಸಿದರು.

***

ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಏರ್ಪಡಿಸಲು ಎಲ್ಲರ ಸಹಕಾರ ಬೇಕಾಗುತ್ತದೆ. ಕ್ರೀಡಾಂಗಣದ ಉನ್ನತೀಕರಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಹೆಚ್ಚಿನ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು.
-ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT