ಶಹಾಪುರ: 60 ವರ್ಷ ತುಂಬಿದ ಬಿಸಿಯೂಟ ಸಿಬ್ಬಂದಿಯನ್ನು ಮನೆಗೆ ಕಳುಹಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ಸಿಐಟಿಯು ಸಂಘಟನೆಯ ಹಾಗೂ ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು.
ಮಕ್ಕಳಲ್ಲಿ ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ಮಹಿಳೆಯರ ತಾಯ್ತನದ ಪರಿಶ್ರಮವಿದೆ. ಆದರೆ 60 ವರ್ಷ ನೆಪವೊಡ್ಡಿ 19 ವರ್ಷಗಳಿಂದ ಅತ್ಯಂತ ಕಡಿಮೆ ವೇತನದಲ್ಲಿ ದುಡಿದ ಬಡ ಬಿಸಿಯೂಟ ನೌಕರರನ್ನು ಬರಿಗೈಯಲ್ಲಿ ಮನೆಗೆ ಕಳುಹಿಸುವ ಸರ್ಕಾರದ ನಡೆ ಸರಿಯಲ್ಲ ಎಂದು ಸಿಐಟಿಯು ಜಿಲ್ಲಾ ಸಂಚಾಲಕ ಜೈಲಾಲ್ ತೋಟದಮನಿ ತಿಳಿಸಿದರು.
ತಾಲ್ಲೂಕಿನಲ್ಲಿ 869 ಮಹಿಳೆಯರು ಅಕ್ಷರ ದಾಸೋಹ ಯೋಜನೆ ಯಡಿಯಲ್ಲಿ ದುಡಿಯುತ್ತಿದ್ದಾರೆ. 85 ಜನರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿರುವುದು ಬೇಸರ ಮೂಡಿಸಿದೆ. ವೇತನ ಹೆಚ್ಚಳ, ನಿವೃತ್ತಿ ವೇತನ, ಬೇಡಿಕೆಗಳ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.