ಯಾದಗಿರಿ: ‘ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜನವರಿ 8 ರಂದು ವಿವಿಧ ಕಾರ್ಮಿಕ ಸಂಘಟನೆಗಳ ಬೆಂಬಲದೊಂದಿಗೆ ಕಾಂಗ್ರೆಸ್ ಕಾರ್ಮಿಕ ಘಟಕವು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಎಸ್.ಎಸ್.ಪ್ರಕಾಶಂ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಎಸಗುತ್ತಿದೆ. ಸಾರ್ವಜನಿಕ ವಲಯದ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿರುವುದರಿಂದ ಉದ್ಯೋಗ ಕಡಿತ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ರೈಲ್ವೆ, ಏರ್ ಇಂಡಿಯಾ, ಎಚ್ಎಎಲ್, ಬಿಎಸ್ಎನ್ಎಲ್ ಹೀಗೆ ಹಲವು ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯಲು ಮುಂದಾಗಿದೆ’ ಎಂದು ಆರೋಪಿಸಿದರು.
‘ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆ ನೀಡಿದ್ದರು. ಅದನ್ನು ಕೇಂದ್ರ ಸರ್ಕಾರವೂ ಘೋಷಣೆ ಮಾಡಿತ್ತು. ಆದರೆ, 8 ತಿಂಗಳಾದರೂ ಇನ್ನೂ ಜಾರಿಯಾಗಿಲ್ಲ. ಯಾದಗಿರಿ ಮತ್ತು ಬೀದರ್ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಸರಿಯಾದ ಮಾಹಿತಿಯಿಲ್ಲದೆ ಸರ್ಕಾರದ ಸೌಕರ್ಯ ಪಡೆಯಲು ಆಗುತ್ತಿಲ್ಲ. ಕಾಂಗ್ರೆಸ್ ಕಾರ್ಮಿಕ ಘಟಕ ಎಲ್ಲ ವರ್ಗದ ಕಾರ್ಮಿಕರಿಗೆ ಸೌಕರ್ಯ ಒದಗಿಸಿಕಕೊಡುವಲ್ಲಿ ಶ್ರಮಿಸಲಿದೆ’ ಎಂದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸಾಬರೆಡ್ಡಿ ಎನ್.ಕಲಬುರ್ಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ತುನ್ನೂರ, ಶ್ರೀನಿವಾಸರೆಡ್ಡಿ ಕಂದಕೂರ, ಸುರೇಶ ಜೈನ್, ಮಂಜೂಳಾ ಗೂಳಿ, ಮಾಣಿಕರೆಡ್ಡಿ ಕುರುಕುಂದಾ, ಸಂಜೀವ ಕಾವಲಿ ಇದ್ದರು.