ಯಾದಗಿರಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಕೆಲ ಸಂಘಟನೆಗಳು ಬಂದ್ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದರಿಂದ ಗುರುವಾರ ಎಲ್ಲಿಯೂ ಪ್ರತಿಭಟನೆ ನಡೆಯಲಿಲ್ಲ.
ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಲು ಪೊಲೀಸರ ಅನುಮತಿ ಕೇಳಿದ್ದರಿಂದ ಜಿಲ್ಲೆಯಾದ್ಯಂತ ಡಿಸೆಂಬರ್ 18ರ ರಾತ್ರಿ 9ರಿಂದ ಡಿಸೆಂಬರ್ 21ರ ರಾತ್ರಿ 11.59ರ ತನಕ144 ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆದೇಶಿದ್ದರು.
ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿಇದ್ದರೂ ಎಂದಿನಂತೆ ಶಾಲಾ–ಕಾಲೇಜು, ಸರ್ಕಾರಿ ಕಚೇರಿ, ವ್ಯಾಪಾರ, ವಹಿವಾಟು ನಡೆಯಿತು. ಅಂಗಡಿ ಮುಂಗಟ್ಟುಗಳು ಬಂದ್ ಆಗಿಲ್ಲ. ಎಂದಿನಂತೆ ಯಥಾಸ್ಥಿತಿ ಇತ್ತು.
‘ಜಿಲ್ಲೆಯಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆದಿಲ್ಲ. ಎಲ್ಲವೂ ಶಾಂತಿಯುತವಾಗಿದೆ. ಯಾರೂ ಪ್ರತಿಭಟನೆ ಮಾಡಿಲ್ಲ’ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಋಷಿಕೇಶ ಭಗವಾನ್ ಸೋನವಣೆ ‘ಪ್ರಜಾವಾಣಿ’ಗೆ ತಿಳಿಸಿದರು.