ಯಾದಗಿರಿ: ಬೆಂಗಳೂರು ಸೇರಿ ದಂತೆ ಹೊರಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ಜಿಲ್ಲೆಯ ಜನರಿಗೆ ಚೆಕ್ಪೋಸ್ಟ್ಗಳಲ್ಲಿ ಕೋವಿಡ್ ರ್ಯಾಪಿಡ್ ಟೆಸ್ಟ್ ನಡೆಸಿ, ಕ್ವಾರಂಟೈನ್ಲ್ಲಿಡಲಾಗುವುದು ಎಂದು ಜಿಲ್ಲಾಧಿಕಾರಿ ರಾಗಪ್ರಿಯಾ. ಆರ್ ತಿಳಿಸಿದರು.
ನಗರಸಭೆ, ಪುರಸಭೆ ಅಧಿಕಾರಿಗಳು ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ 20 ಮೊಬೈಲ್ ಕೋವಿಡ್ ಸ್ವ್ಯಾಬ್ ಮಾದರಿ ಸಂಗ್ರಹ ತಂಡ, ಆದ್ಯತೆ ಮೇರೆಗೆ ಹೊರ ಜಿಲ್ಲೆಯಿಂದ ಬರುವ ಜನರಿಗೆ ಕೋವಿಡ್ ಟೆಸ್ಟ್ ಮಾಡಬೇಕು. ಕೋವಿಡ್ ಪಾಸಿಟಿವ್ ವರದಿ ಬಂದವರಿಗೆ ಕ್ವಾರಂಟೈನ್ ಸೆಂಟರ್ ಅಥವಾ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸ ಲಾಗುವುದು. ನೆಗೆಟಿವ್ ವರದಿ ಬಂದವರಿಗೆ ಅವರವರ ಮನೆಗಳಿಗೆ ಕಳುಹಿಸಲಾಗುವುದು ಎಂದರು.
ಜಿಲ್ಲೆಗೆ ಮರಳುವ ಜನರನ್ನು ಹಿಂದುಳಿದ ವರ್ಗಗಳ ಇಲಾಖೆಯ ಬಿಸಿಎಂ ಹಾಸ್ಟೆಲ್, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮುಂತಾದವು ಗಳನ್ನು ಗುರುತಿಸಿ, ಜನರನ್ನು ಕ್ವಾರಾಂಟೈನ್ನ ಲ್ಲಿಡಬೇಕು. ಇಲ್ಲಿ ಇರಿಸಲಾಗುವ ಜನರಿಗೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು.
ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹ ಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಆಯಾ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಚೆಕ್ಪೋಸ್ಟ್ನಿಂದ ಕ್ವಾರಂಟೈನ್ ಕೇಂದ್ರಗಳಿಗೆ ಜನರನ್ನು ಕರೆದೊಯ್ಯಲು ಬಸ್ ವ್ಯವಸ್ಥೆ ಮಾಡಬೇಕೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಮಟ್ಟದಲ್ಲಿರುವ ಕಾರ್ಯಪಡೆ (ಟಾಸ್ಕ್ಪೋರ್ಸ್) ಸಮಿತಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್ ಸರಪಳಿ ತುಂಡರಿಸಬೇಕು ಎಂದು ಅವರು ಸಲಹೆ ನೀಡಿದರು.
ಮೇ 10ರಿಂದ 24ವರೆಗೆ ಕರ್ಫ್ಯೂ ಕಾರಣದಿಂದ ವಿಧಿಸಲಾಗಿರುವ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅನಗತ್ಯವಾಗಿ ಓಡಾಡುವವರಿಗೆ ದಂಡವಿಧಿಸಬೇಕು ಎಂದು ತಾಕೀತು ಮಾಡಿದರು.
ಸರ್ಕಾರದಿಂದ ಜಿಲ್ಲೆಗೆ 10 ವೆಂಟಿಲೇಟರ್ಗಳು ಮಂಜೂರಾಗಿ ಬಂದಿದ್ದು, ಕೋವಿಡ್-19 ಜಿಲ್ಲಾ ಆಸ್ಪತ್ರೆಯಲ್ಲಿ ಕೂಡಲೇ 10 ವೆಂಟಿಲೇಟರ್ ಅಳವಡಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವ ಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೆಖ್ಖ ಕಿಶೋರ್ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್. ಜಿ. ರಜಪೂತ್, ಉಪವಿಭಾಗಾಧಿಕಾರಿ ಶಂಕರ್ಗೌಡ ಸೋಮನಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.